ಉಡುಪಿ: ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಶಾಲಾ ವ್ಯಾನ್ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಆ.01ರ ಬೆಳಗ್ಗೆ ಉಡುಪಿಯಲ್ಲಿ ಸಂಭವಿಸಿದೆ.
ಮೃತರನ್ನು ಕಾರ್ಕಳದ ನೀರೆ ಬೈಲೂರು ನಿವಾಸಿ ಮೊಯ್ದಿನ್ ಬಾವ (65) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ ಇದ್ದಕ್ಕಿದ್ದಂತೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಸಮಾಜಸೇವಕ ನಿತ್ಯಾನಂದ ಒಳಕಾಡುವರನ್ನು ಕರೆದು ಅವರಿಗೆ ಚಾಲಕ ಎದೆನೋವಿನ ವಿಚಾರವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ತಕ್ಷಣವೇ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಚಾಲಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಅದೃಷ್ಟವಶಾತ್, ಚಾಲಕ ಎದೆನೋವು ಕಾಣಿಸಿಕೊಳ್ಳುತ್ತಿದ್ದಂತೆ ವಾಹನವನ್ನು ನಿಲ್ಲಿಸಿ ಸಹಾಯ ಕೇಳಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.



