ಬಂಟ್ವಾಳ: ತಾಲೂಕಿನ ಬಿ.ಸಿ.ರೋಡು ಅಂಬೇಡ್ಕರ್ ಭವನದಲ್ಲಿ ತಾಲೂಕು ಪಂಚಾಯಿತಿ ಮತ್ತು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ‘ಆಟಿದ ಗಮ್ಮತ್ತ್’ ಕಾರ್ಯಕ್ರಮಕ್ಕೆ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಚಾಲನೆ ನೀಡಿದರುಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾನಾಡಿದ ಶಿಕ್ಷಕ ಕಲ್ಲಡ್ಕ ವಿಠ್ಠಲ ನಾಯಕ್ ಸರಕಾರದ ವಿವಿಧ ಇಲಾಖೆಗಳಲ್ಲಿ ನೌಕರರು ಮತ್ತು ಅಧಿಕಾರಿಗಳು ಪರಸ್ಪರ ಸಮನ್ವಯ ಕಾಯ್ದುಕೊಳ್ಳುವುದರ ಜೊತೆಗೆ ನಾಗರಿಕರಿಗೆ ನಗುಮುಖದ ಸೇವೆ ನೀಡಿದಾಗ ಅವರ ಮನೆಯಲ್ಲಿ ಕೂಡಾ ಸಂತಸದ ವಾತಾವರಣ ಸೃಷ್ಟಿಯಾಗುತ್ತದೆ ಎಂದರು.

ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ‘ ತುಳುನಾಡಿನ ಆಚಾರ ವಿಚಾರಗಳ ಬಗ್ಗೆ ಯುವ ಪೀಳಿಗೆಗೆ ತಿಳಿಸಲು ಮುಂದಾದ ಅಧಿಕಾರಿಗಳ ಶ್ರಮ ಶ್ಲಾಘನೀಯ’ ಎಂದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು.

ಪುರಸಭಾಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಸಮಿತಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ್ ಶುಭ ಹಾರೈಸಿದರು. ತಾ. ಪಂ. ಇಒ ಸಚಿನ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ನರೇಗಾ ಸಹಾಯಕ ನಿರ್ದೇಶಕ ವಿಶ್ವನಾಥ್ ವಂದಿಸಿ, ಪಿಡಿಒ ಸುನಿಲ್ ಕಾರ್ಯಕ್ರಮ ನಿರೂಪಿಸಿದರು.



