ಉಡುಪಿ: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಗ್ರಾಮದ ಕೊಡಂಕೂರು ನ್ಯೂಕಾಲೋನಿಯಲ್ಲಿ ಕಳೆದ 1 ತಿಂಗಳ ಹಿಂದೆ ನಡೆದ ಸರಣಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಂತರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿ ಮೊಹಮ್ಮದ್ ಆಸೀಫ್ ಬೆಟಗೇರಿ (28) ಎಂದು ಗುರುತಿಸಲಾಗಿದೆ.

ಈತ ತನಿಖೆಯ ವೇಳೆ ಜುಲೈ 5ರಂದು ಮಧ್ಯರಾತ್ರಿ ತನ್ನ ಸಹಚರರೊಂದಿಗೆ ವಾಹನದಲ್ಲಿ ಬಂದು ಕೊಡಂಕೂರು ನ್ಯೂ ಕಾಲೋನಿಯ ಮೂರು ಮನೆಗಳ ಬೀಗ ಒಡೆದು ಒಳ ನುಗ್ಗಿದ್ದಾಗಿ ಮತ್ತು ಕಳವು ಮಾಡಿದ ಚಿನ್ನಾಭರಣ ಮತ್ತು ಹಣವನ್ನು ಭಟ್ಕಳ ಮತ್ತು ಶಿರಸಿಯಲ್ಲಿ ಮಾರಾಟ ಮಾಡಿ ಹಣ ಗಳಿಸಿದ್ದಾಗಿ ಒಪ್ಪಿಕೊಂಡಿದ್ದಾನೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಸದ್ಯ ಆರೋಪಿ ನೀಡಿದ ಮಾಹಿತಿ ಆಧರಿಸಿ, ಪೊಲೀಸರು ಭಟ್ಕಳ ಮತ್ತು ಶಿರಸಿಯಲ್ಲಿ ಮಾರಾಟ ಮಾಡಿದ್ದ ಸುಮಾರು 95.5 ಗ್ರಾಂ ತೂಕದ ಚಿನ್ನಾಭರಣ ಮತ್ತು 255 ಗ್ರಾಂ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ ಸುಮಾರು 8.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.


