ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರರಾಗಿರುವ ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಖಾಸಗಿ ವಾಹಿನಿಯ ಪತ್ರಕರ್ತರಾಗಿರುವ ಹರೀಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬುಧವಾರ ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ವಿಚಾರದಲ್ಲಿ ಹಲ್ಲೆಗೆ ಒಳಗಾದವರನ್ನು ನಾನು ಮಾತನಾಡಿಸಲು ಉಜಿರೆಯ ಬೆನಕ ಆಸ್ಪತ್ರೆಗೆ ಬಂದಿದ್ದೆ.
ಈ ಸಂದರ್ಭ ಗಿರೀಶ್ ಮಟ್ಟಣವರ್ ಬಳಿ ಬೈಟ್ ಕೊಡುವಂತೆ ಕೇಳಿದಾಗ ನನ್ನ ಮೇಲೆ ಬೈಯಲು ಆರಂಭಿಸಿದರು.
ಈ ವೇಳೆ ಅಲ್ಲೇ ಇದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಗ್ಯಾಂಗ್ ಸದಸ್ಯರು ಹಲ್ಲೆ ಮಾಡಿದ್ದಾರೆ. ಅಲ್ಲದೆ ಕೀಳು ಭಾಷೆಯಿಂದ ನಿಂದಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸಮೀರ್ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಪೊಲೀಸರು ನನ್ನನ್ನು ರಕ್ಷಣೆ ಮಾಡಿ ಒಳಗೆ ಕೂರಿಸಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಜಯಂತ್ .ಟಿ ನನ್ನ ವಿಡಿಯೋ ಮಾಡಿ ಹಲ್ಲೆ ಮಾಡಿದ್ದಾರೆ.
ನನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದು ಹರೀಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.



