ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವೇಕಾನಂದ ಶಿಶು ಮಂದಿರದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪುತ್ತೂರು ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಸಹಯೋಗದಲ್ಲಿ 27ನೇ ವರ್ಷದ ಶ್ರೀಕೃಷ್ಣನ ಬಾಲಲೀಲೆಗಳನ್ನು ನೆನಪಿಸುವ ‘ಶ್ರೀಕೃಷ್ಣಲೋಕ’ ಕಾರ್ಯಕ್ರಮ ಆ.16ರಂದು ನಡೆಯಿತು.

ಪರ್ಲಡ್ಕ ಶಿವಪೇಟೆಯಲ್ಲಿರುವ ಶಿಶು ಮಂದಿರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಂದ ಪ್ರಾರ್ಥನೆ ನಡೆದು, ಕೃಷ್ಣ ರಾಧೆಯರ ನೊಂದಾವಣೆಯು ಪ್ರಾರಂಭಗೊಂಡಿತು. ವಿದ್ಯಾರ್ಥಿಗಳಿಂದ ಭಜನೆ ಬಳಿಕ ತೊಟ್ಟಿಲ ಸಂಭ್ರಮದ ಮಗುವಿನ ಅಮ್ಮನಿಗೆ ಆರತಿ ಬೆಳಗಿ ಬಾಗಿನ ಅರ್ಪಿಸಲಾಯಿತು.
ಆರು ತಿಂಗಳ ಮಗು ಶ್ರೇಷ್ಠಾನ್ ನನ್ನು ತೊಟ್ಟಿಲಲ್ಲಿ ಮಲಗಿಸಿ, ಬೆಣ್ಣೆ ತಿನ್ನಿಸಿ, ಮಾತೃ ಮಂಡಳಿಯ ಸದಸ್ಯರು, ಮಾತೆಯರು ಬಾಲಕೃಷ್ಣನ ತೊಟ್ಟಿಲ ತೂಗಿ, ಜೋಗುಳ ಹಾಡಿ ಸಂಭ್ರಮಿಸಿದರು.

ನಂತರ ನಡೆದ ಶ್ರೀಕೃಷ್ಣ-ರಾಧೆಯರ ಶೋಭಾಯಾತ್ರೆಗೆ ಮಾಜಿ ಶಾಸಕ ಸಂಜೀವ ಮಠಂದೂರು ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್ ಧ್ವಜ ಹಸ್ತಾಂತರಿಸಿದರು. ಶಿವಪೇಟೆಯ ಶಿಶು ಮಂದಿರದ ಆವರಣದಿಂದ ಹೊರಟ ಮೆರವಣಿಗೆಯು ಎಂ.ಟಿ ರಸ್ತೆಯಾಗಿ ಮುಖ್ಯ ರಸ್ತೆಯ ಮೂಲಕ ಪ್ರಧಾನ ಅಂಚೆ ಕಚೇರಿಯ ಬಳಿಯಿಂದಾಗಿ ಸಾಗಿ ಮಹಾಲಿಂಗೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಸಮಾಪನಗೊಂಡಿತು.

ಕೃಷ್ಣ ರಾಧೆಯ ವೇಷ ಧರಿಸಿದ ಸಾವಿರಾರು ಪುಟಾಣಿಗಳ ವೈಭವದ ಮೆರವಣಿಗೆಯಲ್ಲಿ ಮಕ್ಕಳ ಪೋಷಕರು ಜತೆಯಾಗಿ ಸಾಗಿದರು. ಶ್ರೀಕೃಷ್ಣ ಹಾಗೂ ರಾಧೆಯ ವೇಷ ಭೂಷಣದೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರತಿ ಮಗುವಿನಲ್ಲಿಯೂ ಕೃಷ್ಣನನ್ನು ಕಾಣುವ ಖುಷಿ ಪೋಷಕರದ್ದು ಆಗಿತ್ತು. ಕೆಲವು ಮಕ್ಕಳು ಕೊಳಲು ಹಿಡಿದು ಕುಣಿದು ಸಂಭ್ರಮಿಸಿದರೆ ಇನ್ನು ಕೆಲವು ಮಕ್ಕಳ ಆಟ, ತುಂಟಾಟವು ನೋಡುಗರ ಗಮನ ಸೆಳೆಯಿತು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕುಣಿತ ಭಜನೆ, ಬ್ಯಾಂಡ್, ವಾಲಗ ಮೆರವಣಿಗೆಯಲ್ಲಿ ಮೇಲೈಸಿತು. ಮೆರವಣಿಗೆಯಲ್ಲಿ ಸಾಗುತ್ತಿದ್ದ ಪುಟಾಣಿಗಳಿಗೆ ಅಲ್ಲಲ್ಲಿ ಪುಷ್ಪಾರ್ಚಣೆ ನಡೆಯಿತು. ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಸಹಕರಿಸಿದ್ದರು.

ಈ ಸಂದರ್ಭ ರಾಜಗೋಪಾಲ ಭಟ್, ಅಕ್ಷಯ ಕುಮಾರ್ ಬಿ.ಯಸ್.ವಿವೇಕಾನಂದ ಶಿಶುಮಂದಿರದ ಗೌರವ ಅಧ್ಯಕ್ಷೆ ರಾಜೀ ಬಲರಾಮ್,ಅಧ್ಯಕ್ಷ ಮೋಹನ್ ಕೆ, ಚಂದ್ರಪ್ರಭಾ ಸತೀಶ್,ಮಾಲಿನಿ ಕಶ್ಯಪ್, ಕಿರಣ ಶಂಕರ ಮಲ್ಯ, ಅಮಿತ್, ಬ್ರಿಜೇಶ್ ರೈ,ಆಡಳಿತ ಮಂಡಳಿ ಸದಸ್ಯರು,ಮತ್ತು ಮಾತಾಜಿಯವರು ಉಪಸ್ಥಿತರಿದ್ದರು.


