ಉಳ್ಳಾಲ: ಕಾಪಿಕಾಡು ಬಳಿ ಹೆದ್ದಾರಿ ದಾಟುತ್ತಿದ್ದ ವೇಳೆ ಮೋಟಾರ್ ಬೈಕ್ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಂಪಲ ಚೇತನ ನಗರ ನಿವಾಸಿ ಲೋಕೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಲೋಕೇಶ್ ಅವರು ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಲೋಕೇಶ್ ಅವರು ಆಗಸ್ಟ್ 15ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ಇದರಿಂದ ಗಂಭೀರ ಗಾಯಗೊಂಡು ಅವರನ್ನು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.



