ಪುತ್ತೂರು : ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್, ದೂರುದಾರರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದ ಘಟನೆ ಆ.28 ರಂದು ನಡೆದಿದೆ.
ಈ ದಾಳಿ ವೇಳೆ, ಸುನೀಲ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಮತ್ತೊಬ್ಬ ಆರೋಪಿ ಪುತ್ತೂರು ತಹಶೀಲ್ದಾರ್ ಕುಡಲಗಿ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ.

ದೂರುದಾರರ ಚಿಕ್ಕಪ್ಪನವರಿಗೆ ಸೇರಿದ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ಮಂಜೂರಾಗಿದ್ದು, ನಂತರ ಅವರು ವೀಲುನಾಮೆ ಮೂಲಕ ದೂರುದಾರರಿಗೆ ಹಕ್ಕು ಬರೆಸಿಕೊಟ್ಟಿದ್ದರು.
ಜಾಗವನ್ನು ಪರಭಾರೆ ಮಾಡಲು ತಹಶೀಲ್ದಾರ್ ನಿರಾಕ್ಷೇಪಣಾ ಪತ್ರ ಅವಶ್ಯಕವಾಗಿದ್ದರಿಂದ, 2024ರ ಡಿಸೆಂಬರ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.ಅರ್ಜಿ ಬಾಕಿ ಇರುವುದರಿಂದ ವಿಚಾರಿಸಿದಾಗ, ಕೇಸ್ ವರ್ಕರ್ ಸುನೀಲ್ ತಹಶೀಲ್ದಾರರ ಸಹಿಗೆ ಲಂಚ ಅವಶ್ಯಕ ಎಂದು ಹೇಳಿ ಹಣ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ, ಅಧಿಕಾರಿ ಸುನೀಲ್ 12,000 ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿ ಬಂಧಿಸಿದ್ದಾರೆ.
ತಹಶೀಲ್ದಾರ್ ಕುಡಲಗಿ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




