ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳ ಗ್ರಾಮದ ಪಾಂಗಾಳದಲ್ಲಿರುವ ಕು. ಸೌಜನ್ಯ ಮನೆಗೆ ಸೆ.1 ರಂದು ಭೇಟಿ ನೀಡಿದರು.
ಈ ವೇಳೆ ಮನೆಯವರೊಂದಿಗೆ ಮಾತನಾಡಿದ ಅವರು ಕೊಲೆ ವಿಚಾರವಾಗಿ ಕುಟುಂಬ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದರೆ, ಅದರ ಸಂಪೂರ್ಣ ವೆಚ್ಚವನ್ನು ಬಿಜೆಪಿ ಭರಿಸಲಿದೆ ಎಂದು ಭರವಸೆ ನೀಡಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು ಸೌಜನ್ಯ ಅವರ ತಾಯಿ ಮತ್ತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಇಂದು ಬೆಳಗ್ಗೆ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರ ಜೊತೆ ಮಾತನಾಡಿದ್ದೆ. ಅಲ್ಲದೇ ಇಲ್ಲಿಗೆ ಬರುವ ಅಪೇಕ್ಷೆ ವ್ಯಕ್ತಪಡಿಸಿದ್ದೆ. ಸಮಾವೇಶ ಮುಗಿದ ಬಳಿಕ ಇಲ್ಲಿಗೆ ಬಂದಿದ್ದೇನೆ. ನಾವು ನಿಮ್ಮ ಜೊತೆ ಸಂಪೂರ್ಣವಾಗಿ ಇದ್ದೇವೆ ಎಂದು ತಿಳಿಸಿದ್ದಾಗಿ ಹೇಳಿದರು. ಸೌಜನ್ಯರ ತಾಯಿ ಮಗಳ ಸಾವಿನ ನೋವಿನಿಂದ ಇನ್ನೂ ಹೊರಬಂದಿಲ್ಲ ಎಂದರು.

ಈ ಸಂದರ್ಭದಲ್ಲಿ ಸಂಸದ ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ. ಪ್ರೀತಮ್ ಗೌಡ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜಾ, ಶಾಸಕರಾದ ಗುರುರಾಜ್ ಗಂಟಿಹೊಳೆ ಮತ್ತು ಸಿಮೆಂಟ್ ಮಂಜುನಾಥ್, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ ಮತ್ತು ಶರಣು ತಳ್ಳಿಕೇರಿ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ರಾಜ್ಯ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡಂಜಿ ಉಪಸ್ಥಿತರಿದ್ದರು.




