ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆ ಪ್ರತೀ ವರ್ಷ ನೀಡುವ ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ-2025 ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಿ.ಉಮಾಪತಿ ಆಯ್ಕೆಯಾಗಿದ್ದಾರೆ.
ಸಂಘದ ಏಳನೇ ಪುರಸ್ಕಾರಕ್ಕೆ ದೆಹಲಿ ಪ್ರತಿನಿಧಿಯಾಗಿರುವ ಚಿತ್ರದುರ್ಗ ಮೂಲದ ಡಿ.ಉಮಾಪತಿ ಅವರನ್ನು ಪತ್ರಕರ್ತರ ಸಂಘವು ಆಯ್ಕೆ ಮಾಡಿರುವ ಕುರಿತು ಪ್ರಕಟಣೆಯಲ್ಲಿ ತಿಳಿಸಿದೆ.
ಸೆ. 07ರಂದು ಲೋಟಸ್ ಸಭಾಗೃಹ, ಸಾಲೀಟರಿ ಕಾರ್ಪೋರೆಟ್ ಪಾರ್ಕ್, ಅಂಧೇರಿ ಪೂರ್ವ ಮುಂಬಯಿ ಇಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ಜರುಗುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಈ ಪುರಸ್ಕಾರ ಪ್ರದಾನಿಸಲಾಗುವುದು ಎಂದು ಕಪಸಮ ಗೌರವ ಪ್ರಧಾನ ಕಾರ್ಯದರ್ಶಿ ಸಾ.ದಯಾ ಮತ್ತು ಗೌರವ ಕೋಶಾಧಿಕಾರಿ ವಿಶ್ವನಾಥ್ ಪೂಜಾರಿ ನಿಡ್ಡೋಡಿ ತಿಳಿಸಿದ್ದಾರೆ.

ಪತ್ರಕರ್ತ ಡಿ.ಉಮಾಪತಿ ಮಾದ್ಯಮ ಪಯಣ
ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ.ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜ್ನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ್ಯಾಂಕ್ ಮೂಲಕ ಪಡೆದವರು. ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ಸಮೂಹ ಸಂಸ್ಥೆಯ ಕನ್ನಡ ಪ್ರಭ, ಈ ಟಿವಿಯ ದೆಹಲಿ ಪ್ರತಿನಿಧಿಯಾಗಿ ಕಳೆದ 27 ವರ್ಷಗಳಿಂದ, ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು. ಇವರು ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು, ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಹೊಂದಿದ್ದಾರೆ.
ದೆಹಲಿಯಲ್ಲಿ ನೆಲೆಸಿರುವ ಡಿ.ಉಮಾಪತಿ ಅವರು ಆಂದೋಲನ, ರೈತ ಚಳವಳಿ, ವಿಜಯಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ, ಪ್ರಸ್ತುತ ‘ನ್ಯಾಯಪಥ’ (ಗೌರಿ ಮಿಡಿಯಾ) ಮತ್ತು ‘ಈದಿನ’ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಡಮಾಡುವ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೂ ಇವರು ಭಾಜನರಾಗಿದ್ದರು. ಇದಿಷ್ಟೇ ಅಲ್ಲದೆ ಇವರ ವಸ್ತುನಿಷ್ಠ ವರದಿಗೆ ಹಲವಾರು ಗೌರವಗಳು ಸಂದಿವೆ.
ಶ್ರೀ ಕೆ.ಟಿ ವೇಣುಗೋಪಾಲ್ ಪ್ರಶಸ್ತಿಯ ಉದ್ದೇಶ
ಸಮಾಜಮುಖಿ ದೃಷ್ಠಿಕೋನವುಳ್ಳವರಾಗಿದ್ದ ಶ್ರೀ ಕೆ.ಟಿ ವೇಣುಗೋಪಾಲ್ ಅವರು ಓರ್ವ ಹಿರಿಯ ಪತ್ರಕರ್ತನಾಗಿ ಮುಂಬಯಿ ಕನ್ನಡ ಪತ್ರಿಕೋದ್ಯಮ ರಂಗಕ್ಕೆ ಸುಮಾರು ಮೂರುವರೆ ದಶಕಗಳ ದೀರ್ಘಾವಧಿಯ ಅನುಪಮ, ಅತ್ಯಮೂಲ್ಯ ಸೇವೆಗೈದಿರುವರು. ಸ್ವಂತಿಕೆಯ ಪ್ರತಿಷ್ಠೆಯೊಂದಿಗೆ ಅಗ್ರಗಣ್ಯ ಪತ್ರಕರ್ತರೆನಿಸಿದ ಸ್ವರ್ಗೀಯ ಶ್ರೀ ಕೆ.ಟಿ ವೇಣುಗೋಪಾಲ್ ಅವರ ಸೇವೆ ಅನನ್ಯವೂ ಸ್ಮರಣೀಯವೂ ಆಗಿದೆ.
ಕಥೆಗಾರನೂ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಹಿರಿಯ ಸದಸ್ಯರಾಗಿದ್ದು ಸಂಘದ ಸಂವಿಧಾನ ರಚನಾ ಸಮಿತಿ ಕಾರ್ಯಾಧ್ಯಕ್ಷ ಆಗಿದ್ದ ಇವರು ತಮ್ಮ ನಿವೃತ್ತ ಜೀವನದ ಬಳಿಕ ಪುಣೆಯಲ್ಲಿ ನೆಲೆಯಾಗಿದ್ದು 2009ರಲ್ಲಿ ನಿಧನರಾದರು. ಈಗಲೂ ಪತ್ರಿಕೋದ್ಯಮ ರಂಗದಲ್ಲಿ, ಜನಮಾನಸದಲ್ಲಿ ನೆಲೆಯಾಗಿರುವ ಶ್ರೇಷ್ಠ ಪತ್ರಕರ್ತ ಇವರು.

ಪತ್ರಿಕೋದ್ಯಮದಲ್ಲಿ ಬದ್ದತೆಯಿಂದ ವೃತ್ತಿಗೆ ಘನತೆಯನ್ನು ತಂದೊದಗಿಸಿದ ಕೆಟಿವಿ ನಿಷ್ಠೆಯನ್ನು ಭವಿಷ್ಯತ್ತಿನ ಪತ್ರಕರ್ತ ಸಮುದಾಯಕ್ಕೆ ಮಾದರಿ ಆಗಿಸುವ ನಿಟ್ಟಿನಲ್ಲಿ ಕೆ.ಟಿ ವೇಣುಗೋಪಾಲ್ ಸ್ಮರಣಾರ್ಥ ಕನ್ನಡಿಗ ಪತ್ರಕರ್ತರ ಸಂಘವು ವರ್ಷಂಪ್ರತಿ ಈ ಪ್ರಶಸ್ತಿ ಪ್ರದಾನಿಸುತ್ತಿದೆ .
ದಿ| ಶ್ರೀ ಕೆ.ಟಿ ವೇಣುಗೋಪಾಲ್ ಅವರ ಸುಪುತ್ರ ವಿಕಾಸ್ ವೇಣುಗೋಪಾಲ್ ಪರಿವಾರದ ಸಹಕಾರ ಮತ್ತು ಕಪಸಮದ ಪ್ರಶಸ್ತಿನಿಧಿಯೊಂದಿಗೆ ವಾರ್ಷಿಕವಾಗಿ ಕೊಡಮಾಡುವ ಈ ಪ್ರಶಸ್ತಿಯು ರೂಪಾಯಿ 25,000/- ನಗದು, ಪ್ರಶಸ್ತಿಪತ್ರ ಮತ್ತು ಸ್ಮರಣಿಕೆ ಹೊಂದಿರುತ್ತದೆ.

2025ನೇ ಸಾಲಿನ ಕಪಸಮ ಏಳನೇ ವಾರ್ಷಿಕ ಪ್ರಶಸ್ತಿ ಅರ್ಹ ಕನ್ನಡಿಗ ಪತ್ರಕರ್ತರಿಗೆ ನೀಡಲಾಗುತ್ತಿದ್ದು, ಇತ್ತೀಚೆಗೆ ನಡೆಸಲ್ಪಟ್ಟ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸಭೆಯ ನಿರ್ಧಾರ ಹಾಗೂ ಪ್ರಶಸ್ತಿ ಆಯ್ಕೆ ಸಮಿತಿ ಕಾರ್ಯಾಧ್ಯಕ್ಷೆ ಡಾ. ಸುನೀತಾ ಎಂ.ಶೆಟ್ಟಿ ಮತ್ತು ತೀರ್ಪುಗಾರರ ಸಮಿತಿಯ ಸದಸ್ಯರಾದ ಹರೀಶ್ ಜಿ.ಪೂಜಾರಿ ಕೊಕ್ಕರ್ಣೆ, ಗೋಪಾಲ ತ್ರಾಸಿ ಮತ್ತು ಸಾ.ದಯಾ (ಸಂಘದ ಗೌರವ ಪ್ರಧಾನ ಕಾರ್ಯದರ್ಶಿ) ನಿರ್ಣಾಯದಂತೆ ಪತ್ರಕರ್ತೆ ಸಿ.ಜಿ.ಮಂಜುಳಾ ಇವರನ್ನೂ ಮಾಧ್ಯಮಶ್ರೀ-2025 ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಹಿರಿಯ ಪತ್ರಕರ್ತರಾದ ನ್ಯಾ| ವಸಂತ ಕಲಕೋಟಿ ಮುಂಬಯಿ ಇವರಿಗೆ ಪ್ರಥಮ ಪ್ರಶಸ್ತಿ (2019), ಜಿ.ಕೆ ರಮೇಶ್ ಮುಂಬಯಿ ದ್ವಿತೀಯ ಪ್ರಶಸ್ತಿ (2020), ಅಚ್ಚುತ ಚೇವ್ಹಾರ್ (ಕಾಸರಗೋಡು, ಕೇರಳ) ತೃತೀಯ ಪ್ರಶಸ್ತಿ (2021), ಲಾರೇನ್ಸ್ ಕುವೆಲ್ಹೋ ಮುಂಬಯಿ ಚತುರ್ಥ ಪ್ರಶಸ್ತಿ (2022), ಸನತ್ ಕುಮಾರ ಬೆಳಗಲಿ (ಜಮಖಂಡಿ) ಐದನೇ ಪ್ರಶಸ್ತಿ (2023), ಪತ್ರಕರ್ತೆ ಸಿ.ಜಿ.ಮಂಜುಳಾ ಬೆಂಗಳೂರು ಆರನೇ ಪ್ರಶಸ್ತಿ (2024) ಪ್ರದಾನಿಸಿ ಗೌರವಿಸಲಾಗಿದೆ.


