ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆ ಅಡ್ಡೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.
ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ.

ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಮೊಹಮ್ಮದ್ ರಫೀಕ್ ಅಲಿಯಾಸ್ ಅಪ್ಪಿ ಎಂಬಾತನ ಮನೆಯಲ್ಲಿ ಈ ಕಸಾಯಿಖಾನೆ ಕಾರ್ಯಾಚರಿಸುತ್ತಿತ್ತು. ಕಾರ್ಯಾಚರಣೆ ವೇಳೆ ಪೊಲೀಸರು ಮೂರು ಕತ್ತಿ, ಎರಡು ಮರದ ಹಿಡಿಕೆಯ ಚಾಕುಗಳು, ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ, ಒಂದು ಮರದ ತುಂಡು, ಟಾರ್ಪಲ್, ಒಂದು ಜೀವಂತ ಹಸು ಮತ್ತು ಕರು, ಜಾನುವಾರು ತ್ಯಾಜ್ಯ ತುಂಬಿದ ಓಮ್ನಿ ವ್ಯಾನ್ ಮತ್ತು ಒಂಬತ್ತು ಕತ್ತರಿಸಿದ ಜಾನುವಾರುಗಳ ತಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮೊಹಮ್ಮದ್ ರಫೀಕ್ ಅಲಿಯಾಸ್ ಅಪ್ಪಿಗೆ ಹಿಂದೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ, ಗೋಹತ್ಯೆಯಲ್ಲಿ ತೊಡಗುವುದನ್ನು ಮುಂದುವರೆಸಿದ್ದ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್, ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಹೆಚ್ ಮಾದರ ಮತ್ತು ಸಿಬ್ಬಂದಿಗಳಾದ ಶ್ರೀನಿವಾಸ್, ಸತೀಶ್, ಜಗದೀಶ್, ಹಾಗೂ ಚಾಲಕ ಧರೇಶ್ ಪಾಲ್ಗೊಂಡಿದ್ದರು.


