ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ (38) ಎಂದು ಗುರುತಿಸಲಾಗಿದೆ.

ಆ.29ರಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿಯೋರ್ವ ಕರೆ ಮಾಡಿ, ‘ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಬೇಕು. ಇಲ್ಲವಾದರೆ ಧ್ವಂಸ ಮಾಡುತ್ತೇನೆ’ ಎಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ಟರ್ಮಿನಲ್ ವ್ಯವಸ್ಥಾಪಕರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆ ದೂರಿನನ್ವಯ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಆರೋಪಿ ಸಸಿಕುಮಾರ್ ನನ್ನು ವೆಲ್ಲೂರಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ‘ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಸಂಪರ್ಕ ಸಂಖ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹುಡುಕಿ, ಕರೆ ಮಾಡಿ ಬೆದರಿಕೆ ಹಾಕಿದ್ದೆ. ಅದೇ ತರಹ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬೆದರಿಕೆ ಹಾಕಿದ್ದೆ’ ಎಂದು ತಿಳಿಸಿದ್ದಾನೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



