ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸಮೀಪದ ಬಲೈಪಾದೆ ಜಂಕ್ಷನ್ನಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ನಿವಾಸಿ ಸುರೇಶ್ (43) ಮೃತ ದುರ್ದೈವಿ. ಇವರು ಬ್ರಹ್ಮಾವರದಲ್ಲಿ ಬ್ರಹ್ಮಾವರ ವರ್ಕ್ ಶಾಪ್ ಎಂಬ ಅಂಗಡಿಯನ್ನು ನಡೆಸುತ್ತಿದ್ದರು.

ಉದ್ಯಾವರದಿಂದ ಸುರೇಶ್ ಅವರು ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಕಟಪಾಡಿಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಬೈಕ್ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ತಮ್ಮ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.




