ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿ, ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಫ್ಸಿ-2 (ಪೊಕ್ಸ್) ನ್ಯಾಯಾಲಯವು ಸೆ. 12 ರಂದು ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಆರೋಪಿಯನ್ನು ಬೆಳಗಾವಿ ಸವದತ್ತಿ ತಾಲೂಕು ಹಂಚಿನಾಳ ಗ್ರಾಮ ಮಾದರ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ (58) ಎಂದು ಗುರುತಿಸಲಾಗಿದೆ.

ಅಪ್ರಾಪ್ತೆಯು ಮೂಲತಃ ಬೆಳಗಾವಿ ಜಿಲ್ಲೆಯ ಚುಂಚನೂರು ಗ್ರಾಮದ ನಿವಾಸಿಯಾಗಿದ್ದು, ಕೊಣಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದಳು.
ಬಾಲಕಿಯ ತಾಯಿ ತನ್ನ ಮಗಳನ್ನು ತನ್ನ ಸೋದರ ಸಂಬಂಧಿಯ ಮನೆಯಲ್ಲಿ ಬಿಟ್ಟು ವಸತಿ ಶಾಲೆಗೆ ಕರೆದುಕೊಂಡು ಹೋಗುವಂತೆ ಹೇಳಿ ಊರಿಗೆ ತೆರಳಿದ್ದರು.

2024ರ ಆ.6ರಂದು ಬೆಳಗ್ಗೆ ಬಾಲಕಿಯ ಮಾವ ಗಾರೆ ಕೆಲಸಕ್ಕೆ ಹೊರಟಿದ್ದರೆ, ಅವರ ಹೆಂಡತಿ ಊರಿಗೆ ಹೋಗಿ ದ್ದರು. ಹಾಗಾಗಿ ಆ ಮನೆಯಲ್ಲಿ ಬಾಲಕಿ ಒಬ್ಬಳೇ ಇರುವುದನ್ನು ಖಚಿತಪಡಿಸಿಕೊಂಡ ಪಕ್ಕದ ಬಾಡಿಗೆ ಮನೆಯಲ್ಲಿದ್ದ ಆರೋಪಿ ಫಕೀರಪ್ಪ ಹಣಮಪ್ಪ ಮಾದರ ಬಾಲಕಿಯಿದ್ದ ಮನೆಗೆ ಅಕ್ರಮ ಪ್ರವೇಶ ಮಾಡಿ ಲೈಂಗಿಕ ದೌರ್ಜನ್ಯ ಎಸಗಿ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಎನ್ನಲಾಗಿದೆ.

ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಫ್ಸಿ-2 ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


