ನೆಲಮಂಗಲ: ಸರಕಾರಿ ಬಸ್ ನ ಚಾಲಕರೊಬ್ಬರು ಸಾವಿನಲ್ಲೂ ಮಾನವೀಯತೆ ಮೆರೆದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಚಾಲಕರಾಗಿರುವ ರಾಜೀವ್ ಬಿರಾದಾರ್ (50) ಎಂಬವರು ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ ಚಾಲಕರಾಗಿದ್ದಾರೆ.

ಬೆಂಗಳೂರಿಂದ ಹರಿಹರಕ್ಕೆ ಹೋಗುತ್ತಿದ್ದ ಕೆಎಸ್ಆರ್ ಟಿಸಿ ರಾಜಹಂಸ ಬಸ್ ನ್ನು ಚಲಾಯಿಸುತ್ತಿದ್ದರು.
ನೆಲಮಂಗಲದ ಜಾಸ್ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಸಮಯಪ್ರಜ್ಞೆ ಮೆರೆದ ಅವರು ತಕ್ಷಣವೇ ಬಸ್ಸನ್ನು ಹೆದ್ದಾರಿಯಲ್ಲಿ ಒಂದು ಬದಿಯಲ್ಲಿ ನಿಲ್ಲಿಸಿದ್ದಾರೆ.

ಇದರಿಂದಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೂಡಲೇ ಆ್ಯಂಬುಲೆನ್ಸ್ ಗೆ ಕರೆ ಮಾಡಲಾಯಿತಾದರೂ, ಅದು ಸ್ಥಳಕ್ಕೆ ಬರುವ ವೇಳೆಗೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಚಾಲಕ ಸಾವನ್ನಪ್ಪಿದ್ದಾರೆ.

ಪ್ರಾಣ ಹೋಗುವ ಸಮಯದಲ್ಲೂ ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕ ಬಿರಾದಾರ್ ಗೆ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ..


