ಮಂಗಳೂರು: ಸಂಚಾರ ನಿರ್ವಹಣೆ ಮಾಡುತ್ತಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿಯ ಸೂಚನೆ ಉಲ್ಲಂಘಿಸಿದ್ದಲ್ಲದೆ, ಸ್ಕೂಟರ್ ಸವಾರನೊಬ್ಬ ಪೊಲೀಸ್ ಸಿಬ್ಬಂದಿಯನ್ನೇ ನಿಂದಿಸಿದ ಘಟನೆ ಸೆ.17ರಂದು ಮಂಗಳೂರು ನಗರದಲ್ಲಿ ನಡೆದಿದೆ.

ಬಲ್ಮಠ ಜಂಕ್ಷನ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕೆಲವು ಜನರನ್ನು ರಸ್ತೆ ದಾಟಲು ಅವಕಾಶ ಕಲ್ಪಿಸುವುದಕ್ಕಾಗಿ ವಾಹನಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರು.

ಈ ಸಂದರ್ಭದಲ್ಲಿ ಸ್ಕೂಟರ್ ಸವಾರನೊಬ್ಬ ಸ್ಕೂಟರ್ ನಿಲ್ಲಿಸದೆ ಚಲಾಯಿಸಿದ್ದಾನೆ. ಬಳಿಕ ಸ್ವಲ್ಪ ಮುಂದಕ್ಕೆ ಹೋಗಿ ವಾಪಸ್ ಬಂದು ತನಗೆ ಹೊಡೆದಿದ್ದೇಕೆ ಎಂಬುದಾಗಿ ಪೊಲೀಸ್ ಸಿಬ್ಬಂದಿಗೆ ಸಾರ್ವಜನಿಕವಾಗಿ ನಿಂದಿಸಿದ್ದಾನೆ.
ಸದ್ಯ, ಈ ಘಟನೆಯ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಕಮಿಷನರ್ ಪೊಲೀಸ್ ಸಿಬ್ಬಂದಿಯನ್ನು ಸಾರ್ವಜನಿಕವಾಗಿ ನಿಂದಿಸಿದ ಸ್ಕೂಟರ್ ಸವಾರನ ವಿರುದ್ಧ ಕೇಸು ದಾಖಲಿಸಲಾಗುವುದು ಎಂದಿದ್ದಾರೆ.



