ಉಡುಪಿ: ಟಿಪ್ಪರ್ ಲಾರಿಯೊಂದು ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ ಪಾದಚಾರಿಯೋರ್ವರಿಗೆ ಗುದ್ದಿದ ಘಟನೆ ಸೆ. 25ರಂದು ಕಾಮತ್ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

ಉಡುಪಿಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಪಡುಬಿದ್ರಿ ಕೃಷಿ ಸಹಕಾರಿ ಸಂಘದ ಹಳೆಯ ಗೋದಾಮಿನ ಗೋಡೆಗೆ ಅಪ್ಪಳಿಸಿದೆ. ಪರಿಣಾಮ ಕಟ್ಟಡಕ್ಕೆ ಹಾನಿ ಉಂಟಾಗಿ ಸಹಕಾರಿ ಸಂಘಕ್ಕೂ ನಷ್ಟವಾಗಿದೆ.

ಇದೇ ವೇಳೆ ಎರ್ಮಾಳ್ನ ಪ್ಲೈವುಡ್ ಕಾರ್ಖಾನೆಯಲ್ಲಿ ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಪಡುಬಿದ್ರಿಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ಅಪಘಾತದ ರಭಸಕ್ಕೆ ಬಿಹಾರ ಮೂಲದ ರಾಜಕುಮಾರ್ ಶರ್ಮಾ (23) ಮೃತಪಟ್ಟಿದ್ದಾರೆ.
ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.



