ಗುರುಗ್ರಾಮ: ಪತ್ನಿಯೊಂದಿಗೆ ಜಗಳವಾಡಿ ಆಕೆಯನ್ನು ಕತ್ತುಹಿಸುಕಿ ಕೊಂದು ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಪ್ರಯಾಗ್ರಾಜ್ ನಿವಾಸಿ ಅಜಯ್ ಕುಮಾರ್ (30) ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇಬ್ಬರೂ ಗುರುಗ್ರಾಮ್ನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ದಂಪತಿ ನಡುವೆ ಯಾವುದೋ ವಿಚಾರಕ್ಕೆ ವಾಗ್ವಾದ ನಡೆದಿದ್ದು ಅಜಯ್ ಕುಮಾರ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಬಳಿಕ ತನ್ನ ಸ್ನೇಹಿತನಿಗೆ ವಿಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ಶರ್ಮಾಳ ದೇಹವು ನೆಲದ ಮೇಲೆ ಬಿದ್ದಿರುವುದು ಕಂಡುಬಂದಿದೆ. ಆಕೆಯ ಕುತ್ತಿಗೆಗೆ ಸ್ಕಾರ್ಫ್ನಿಂದ ಬಿಗಿದು ಕೊಲ್ಲಲಾಗಿತ್ತು. ಇನ್ನು ಅಜಯ್ ಕುಮಾರ್ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




