ಕಾರ್ಕಳ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ನಗದು ಸಹಿತ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದು ಕಳ್ಳರು ಪರಾರಿಯಾಗಿರುವ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆಯಲ್ಲಿ ನಡೆದಿದೆ.
ನಕ್ರೆಯ ನಿವಾಸಿಯಾಗಿರುವ ಸಾತುರ್ನಿನ್ ಮತಾಯಸ್ ಎಂಬವರ ಮನೆಯಲ್ಲಿ ಈ ಕಳ್ಳತನ ಪ್ರಕರಣ ನಡೆದಿದೆ.

ಮತಾಯಸ್ ಅವರು ಸೆ. 15ರಂದು ಮಧ್ಯಾಹ್ನ ಮನೆಗೆ ಬೀಗ ಹಾಕಿ ಉತ್ತರ ಭಾರತದ ಲೇಹ್ಗೆ ಹೋಗಿದ್ದು, ಅವರ ಪತ್ನಿ ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದಾರೆ.

ಅ. 1ರಂದು ಮಧ್ಯಾಹ್ನ ವಾಪಾಸು ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಯಾರೋ ಕಳ್ಳರು ಎದುರಿನ ಬಾಗಿಲಿಗೆ ಹಾಕಿದ ಬೀಗವನ್ನು ಮುರಿದು ಒಳ ಪ್ರವೇಶಿಸಿದ್ದಾರೆ.
ಅಂದಾಜು 6 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳರು ಕಳವುಗೈದಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.



