ಉಡುಪಿ: ಉಡುಪಿ ಜಿಲ್ಲಾ ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಮಿಷನ್ ಕಾಂಪೌಂಡ್ನಲ್ಲಿರುವ ಜಗನ್ನಾಥ ಸಭಾಭವನದಲ್ಲಿ ಅ.7ರಂದು ಮಹರ್ಷಿ ವಾಲ್ಮೀಕಿ ಜಯಂತಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಉಡುಪಿಯ ಜನಾರ್ದನ್ ಕೊಡವೂರು ಅವರಿಗೆ ‘ಮಹರ್ಷಿ ವಾಲ್ಮೀಕಿ ಸಮ್ಮಾನ್-2025’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡ ನಾಡು-ನುಡಿ ಸಂಸ್ಕೃತಿ, ಸಾಹಿತ್ಯ, ಛಾಯಾಗ್ರಹಣ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಉಡುಪಿಯ ಜನಾರ್ದನ್ ಕೊಡವೂರು ಅವರಿಗೆ ಈ ಬಾರಿ ಪ್ರಶಸ್ತಿ ಸಲ್ಲಲಿದ್ದು, ಸಂಜೆ 4:30ಕ್ಕೆ ಶಾಸಕ ಯಶ್ಪಾಲ್ ಸುವರ್ಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸಾಹಿತಿ ಕಾತ್ಯಾಯಿನಿ ಕುಂಜಿಬೆಟ್ಟು ಇವರು ಮಹರ್ಷಿ ವಾಲ್ಮೀಕಿ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.

ಉಡುಪಿಯ ಛಾಯಾಗ್ರಾಹಕ-ಪತ್ರಕರ್ತ ಆಸ್ಟ್ರೋ ಮೋಹನ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಹರಿಶ್ಚಂದ್ರ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೋಪಾಲ ದೇವದುರ್ಗ ಹಾಗೂ ಈರಪ್ಪ ಗೌಂಡಿ ಉಪಸ್ಥಿತರಿದ್ದರು.



