ಉಡುಪಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಕುಂದಾಪುರದ ಕಾವ್ರಾಡಿಯ ನೂರಾನಿ ಮಸೀದಿ ಎದುರಿನಲ್ಲಿ ನಿಲ್ಲಿಸಲಾಗಿದ್ದ ಮಾರುತಿ ಸ್ವಿಫ್ಟ್ ಕಾರು ಬೆಂಕಿಗೆ ಆಹುತಿಯಾಗಿದೆ.

ಕಾವ್ರಾಡಿ ಗ್ರಾಮದ ಶೇಖ್ ಮೊಹಮ್ಮದ್ ಗೌಸ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಅವರ ಕುಟುಂಬ ಅ.1ರಂದು ಹೈದರಾಬಾದ್ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸಕ್ಕೆ ಹೋಗುವ 10 ದಿನಗಳ ಮೊದಲು 5 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು ಖರೀದಿಸಿದ್ದರು. ಆದ್ರೆ ಕಾರನ್ನು ಅವರ ಮನೆಗೆ ತೆಗೆದು ಕೊಂಡು ಹೋಗಲು ಇತ್ತೀಚೆಗೆ ದಾರಿಯ ಸಮಸ್ಯೆ ಇದ್ದುದರಿಂದ ಕಾರನ್ನು ಕಾವ್ರಾಡಿಯ ನೂರಾನಿ ಮಸೀದಿಯ ಎದುರಿನ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು ಎನ್ನಲಾಗಿದೆ.

ಅ.4 ರಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ಮೊಹಮ್ಮದ್ ಗೌಸ್ ಅವರ ಸಹೋದರ ಶೇಕ್ ಅನ್ಸಾರ್ ಸಾಹೇಬ್ ನಮಾಜಿಗೆ ಎದ್ದು ಬರುವಾಗ ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿರುವುದು ಕಂಡು ಬಂದಿದೆ. ದುಷ್ಕರ್ಮಿಗಳು ಶೇಖ್ ಮೊಹಮ್ಮದ್ ಗೌಸ್ ಮನೆಯವರಿಗೆ ಆರ್ಥಿಕವಾಗಿ ನಷ್ಟ ಉಂಟು ಮಾಡುವ ಉದ್ದೇಶದಿಂದ ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.



