Breaking
6 May 2026, Wed

ನವೆಂಬರ್​ 1 ರಂದು ಐಟಿಬಿಟಿ ಕಂಪನಿಗಳು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿಕೆ ಶಿವಕುಮಾರ್

ಬೆಂಗಳೂರು: 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ನವೆಂಬರ್​ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ನವೆಂಬರ್ 1​ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಬೆಂಗಳೂರು ಜಿಲ್ಲೆಯಲ್ಲಿ ಶೇ 50 ರಷ್ಟು ಜನ ಹೊರಗಿನಿಂದ ಬಂದವರಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು. ಬಾವುಟ ಹಾರಿಸುವ ಮೂಲಕ ಶ್ರದ್ಧಾ, ಭಕ್ತಿ ಗೌರವ ತೋರಿಸಬೇಕು ಎಂದರು”.

ಬೆಂಗಳೂರಿನಲ್ಲಿ ಎಲ್ಲರೂ ರಾಜೋತ್ಸವ ಆಚರಣೆ ಮಾಡುತ್ತಾರೆ. ರಾಜ್ಯೋತ್ಸವ ಆಚರಣೆಗೆ ಯಾವ ಕನ್ನಡ ಸಂಘಟನೆಗಳು ಕೂಡ ಒತ್ತಡ ಹೇರಬಾರದು. ಸರ್ಕಾರವೇ ಆದೇಶಿಸಿದೆ. ಅದರಂತೆ ರಾಜೋತ್ಸವ ಆಚರಣೆ ಮಾಡುತ್ತಾರೆ. ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸರ್ಕಾರ ನಿರ್ಧಾರ ಮಾಡುತ್ತೆ. ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳ ಬಳಿ ಹೋಗಿ ಗಲಾಟೆ, ಬೆದರಿಸುವುದು ಬೇಡ ಎಂದು ಹೇಳಿದರು.

ಕೊರೊನಾ ಅಕ್ರಮ ಕುರಿತ ತನಿಖೆಗೆ ಎಸ್ಐಟಿ ರಚನೆ ವಿಚಾರವಾಗಿ ಮಾತನಾಡಿದ ಅವರು, ನನ್ನ ನೇತೃತ್ವದಲ್ಲಿ ಸಬ್ ಕಮಿಟಿ ಮಾಡಲಾಗಿದೆ. ಹಬ್ಬದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನಾಡಿದ್ದು ಮಾತನಾಡುತ್ತೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *