ಮಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಗೆ ನಮ್ಮ ಸಹಕಾರ ಇದೆ. ಆದರೆ ಗಣತಿ ಕಾರ್ಯದ ಮುನ್ನ ಮಾಡಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ. ಗಣತಿ ಸಂದರ್ಭ ವಿನಾ ಕಾರಣ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಶಿಕ್ಷಕರಿಗೆ ನೀಡಲಾದ ನೋಟಿಸ್ನ್ನು ವಾಪಸ್ ಪಡೆಯಬೇಕು ಎಂದು ದ.ಕ. ಜಿಲ್ಲಾಡಳಿತವನ್ನು ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಒತ್ತಾಯಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗಣತಿ ಕಾರ್ಯವನ್ನು ವಿಳಂಬವಾಗಿ ನಡೆಸಲು ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಯಾವುದೇ ಗಣತಿ ಕಾರ್ಯಗಳಿಗೆ ಶಿಕ್ಷಕರನ್ನು ಬಳಕೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದೇ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕೂಡ ಶಿಕ್ಷಕರನ್ನು ಬಳಕೆ ಮಾಡದಂತೆ ಆದೇಶ ಹೊರಡಿಸಿದ್ದಾರೆ. ಇದರ ಹೊರತೂ ದ.ಕ. ಜಿಲ್ಲೆಯಲ್ಲಿ ಯಥೇಚ್ಛವಾಗಿ ಶಿಕ್ಷಕರನ್ನು ಬಳಸಲಾಗುತ್ತಿದೆ.

ಶಿಕ್ಷಕರಿಗೆ ಮಧ್ಯರಾತ್ರಿ ಕರೆ ಮಾಡಿ ಹಿರಿಯ ಅಧಿಕಾರಿಗಳು ಜವಾಬ್ದಾರಿ ಹಂಚಿಕೆ ಮಾಡುತ್ತಿದ್ದಾರೆ. ನಸುಕಿನ ಜಾವ 6 ಗಂಟೆಗೆ ಕರೆ ಮಾಡಿ ಗಣತಿಗೆ ಮೊಬೈಲ್ನಲ್ಲಿ ಲಾಗಿನ್ ಆಗುವಂತೆ ಒತ್ತಡ ಹೇರುತ್ತಿದ್ದಾರೆ ಇದು ಸರಿಯಲ್ಲ ಎಂದರು.




