ಉಳ್ಳಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗುಜಿರಿ ಅಂಗಡಿಗೆ ಬೆಂಕಿ ತಗುಲಿದ ಘಟನೆ ತಲಪಾಡಿ ಕೆ.ಸಿ. ರೋಡ್ ಬಳಿಯ ಉಚ್ಚಿಲದಲ್ಲಿ ನಡೆದಿದೆ.

ಅಂಗಡಿಯಲ್ಲಿ ದಾಸ್ತಾನು ಇರಿಸಿದ್ದ ಗುಜಿರಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಈ ಅವಘಡದಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ.

ಬೆಂಕಿ ಕಾಣಿಸಿಕೊಂಡ ಸ್ಥಳದ ಸಮೀಪದಲ್ಲೇ ಪೆಟ್ರೋಲ್ ಬಂಕ್, ಶಾಲೆ ಮತ್ತು ಮನೆಗಳು ಇದ್ದರೂ ಅಗ್ನಿಶಾಮಕ ದಳದವರು ಸಕಾಲದಲ್ಲಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದರು. ಅಗ್ನಿ ಶಾಮಕ ಸಿಬ್ಬಂದಿಯ ಕಾರ್ಯಾಚರಣೆಗೆ ಸ್ಥಳೀಯರು ಸಹಕಾರ ನೀಡಿದರು.




