ಕಲಬುರಗಿ: ಸಂಬಳ ಸಿಗದಿದ್ದಕ್ಕೆ ಬೇಸರಗೊಂಡ ಗ್ರಂಥಾಲಯ ಮೇಲ್ವಿಚಾರಕಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ನಡೆದಿದೆ.
ಭಾಗ್ಯಶ್ರಿ (45) ಮೃತ ಗ್ರಂಥಾಲಯ ಮೇಲ್ವಿಚಾರಕಿಯಾಗಿದ್ದಾರೆ.

ಮಳಖೇಡ ಸರ್ಕಾರಿ ಗ್ರಂಥಾಲಯದಲ್ಲಿ ಮೇಲ್ವಿಚಾರಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಭಾಗ್ಯಶ್ರಿ ಅವರು ಕಳೆದ 3 ತಿಂಗಳಿನಿಂದ ವೇತನ ಪಾವತಿ ಆಗಿರಲಿಲ್ಲ. ಇತ್ತ ಅಧಿಕಾರಿಗಳು ಸತಾಯಿಸುತ್ತಿದ್ದು ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಡೆತ್ ನೋಟ್ ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು “ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಸ್ಥಳಕ್ಕೆ ಬರುವವರೆಗೂ ಮೃತದೇಹವನ್ನು ಹೊರತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ಗ್ರಂಥಾಲಯದ ಎದುರು ಪ್ರತಿಭಟನೆ ನಡೆಸಿದರು.



