ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ವಿಶೇಷ ಸಾಧನೆಗೈದ ಸಾಧಕರನ್ನು ಸಮಾಜದಲ್ಲಿ ಗುರುತಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶೈಕ್ಷಣಿಕ ಸಮಿತಿಯು “ಕಲಾನಿಧಿ” ಪ್ರಶಸ್ತಿಯನ್ನು ಪ್ರಕಟಿಸಿದೆ.
2023ರ ಸಾಲಿನ ಕಲಾನಿಧಿ ಪ್ರಶಸ್ತಿಗೆ ಮುಲ್ಕಿ ಪಂಜಿನಡ್ಕ ಅನುದಾನಿತ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವೆಂಕಿ ಪಲಿಮಾರು.

2024ನೇ ಸಾಲಿನ ಕಲಾ ನಿಧಿ ಪ್ರಶಸ್ತಿಗೆ ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವಿ ಕೆ ವಿಟ್ಲ ಹಾಗೂ2025ನೇ ಸಾಲಿನ ಕಲಾ ಪ್ರಶಸ್ತಿಗೆ ಮಂಗಳೂರಿನ ಕೆನರಾ ಡೊಂಗರಕೇರಿ ಪ್ರೌಢಶಾಲೆಯ ಕಲಾ ಶಿಕ್ಷಕಿ ರಾಜೇಶ್ವರಿ ಕೆ ಇವರು ಆಯ್ಕೆಯಾಗಿದ್ದಾರೆ.
ಕಲಾವಿದರಾದ ಗಣೇಶ್ ಸೋಮಯಾಜಿ, ಗೋಪಾಡ್ಕರ್, ಮೋಹನ್ ಕುಮಾರ್ ಪೆರ್ಮುದೆ, ಎಂ ಎಸ್ ಪುರುಷೋತ್ತಮ್ ಸುಳ್ಯ, ಮನೋರಂಜನಿ ರಾವ್ ಇವರನ್ನು ಒಳಗೊಂಡ ಆಯ್ಕೆ ಸಮಿತಿಯು ಈ ಪ್ರಶಸ್ತಿಯನ್ನು ಪ್ರಕಟಿಸಿದೆ.

ದ.ಕ.ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿಯು ದ. ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ ಕೊಲ್ನಾಡು ಇವರ ಸಹಕಾರದೊಂದಿಗೆ ಕಲಾನಿಧಿ ಪ್ರಶಸ್ತಿ ಪ್ರಧಾನ ಸಮಾರಂಭವು ಅ 18 ಶನಿವಾರ ಬೆಳಿಗ್ಗೆ 10.30 ಕ್ಕೆ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ಇಲ್ಲಿ ನಡೆಯಲಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಶಿಧರ ಜಿ ಎಸ್, ಜಿಲ್ಲಾ ಉಪನಿರ್ದೇಶಕರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಆ) ಇವರು ಗಣ್ಯ ಅತಿಥಿಗಳಾಗಿ ಭಾಗವಹಿಸಿ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಸ್ಥೆಯ ಅಧ್ಯಕ್ಷ ತುಕಾರಾಂ ಪೂಜಾರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಶ್ರೀಮತಿ ಸುಶೀಲ ವಿಟ್ಲ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮ್ ಪ್ರಸಾದ್ ರೈ ತಿರುವಾಜೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶೈಕ್ಷಣಿಕ ಸಮಿತಿಯ ಅಧ್ಯಕ್ಷರಾದ ಗಣೇಶ್ ಸೋಮಯಾಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.



