ಬೆಂಗಳೂರು: ಟಯರ್ ಬ್ಲಾಸ್ಟ್ ಆಗಿ ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದ 36 ಮಂದಿ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದು ಬಂದಿದೆ.
ಗ್ರೀನ್ ಲೈನ್ ಟ್ರಾವೆಲ್ಸ್ಗೆ ಸೇರಿದ ಬಸ್ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೊರಟಿತ್ತು. ಈ ವೇಳೆ ಟಯರ್ ಬ್ಲಾಸ್ಟ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಬ್ಲಾಸ್ಟ್ ಆಗುತ್ತಿದ್ದಂತೆ ಪ್ರಯಾಣಿಕರು ತಮ್ಮ ಲಗೇಜ್ ಗಳನ್ನೂ ಬಿಟ್ಟು ಬಸ್ ನಿಂದ ಜಿಗಿದಿದ್ದಾರೆ. ಹೀಗಾಗಿ ಪ್ರಯಾಣಿರ ಸಂಪೂರ್ಣ ಲಗೇಜ್ ಗಳು ಬೆಂಕಿಗೆ ಆಹುತಿಯಾಗಿದೆ. ವಿದ್ಯಾರ್ಥಿಗಳ ಪ್ರಮಾಣ ಪತ್ರ, ದುಬಾರಿ ವಸ್ತುಗಳು ಸುಟ್ಟು ಭಸ್ಮವಾಗಿದೆ.

ಬಸ್ ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದರೂ ಚಾಲಕ ನಿರ್ಲಕ್ಷ್ಯ ವಹಿಸಿದ್ದು ಡ್ರೈವರ್ ಅರ್ಧ ಕಿ.ಮೀ ಬಸ್ ನಿಲ್ಲಿಸದೇ ಹೊರಟಿದ್ದಾನೆ ಎಂಬ ಆರೋಪ ಕೂಡ ಕೇಳಿಬಂದಿದೆ.ಇದೇ ವೇಳೆ ನಿದ್ರೆ ಮಂಪರಿನಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರಿಗೆ ಎಚ್ಚರವಾಗಿದ್ದು ಕೂಡಲೇ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿ ಕಿರುಚಿದ್ದಾರೆ.

ಸದ್ಯ ಪ್ರಯಾಣಿಕರು ಸೇಫ್ ಆಗಿದ್ದರೂ, ಅವರ ಬಳಿಯಿದ್ದ ಮಹತ್ವದ ದಾಖಲೆಗಳು, ಹಬ್ಬಕ್ಕೆ ಕೊಂಡೊಯ್ಯುತ್ತಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾಗಿದೆ.
ಹೀಗಾಗಿ ಪ್ರಯಾಣಿಕರು ಗ್ರೀನ್ಲೈನ್ ಟ್ರಾವೆಲ್ಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.



