ಸುಳ್ಯ : ತೀರ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿಯೊಬ್ಬರು ಕೊನೆಯುಸಿರೆಳೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲೆಯೊಂದರಲ್ಲಿ ನೃತ್ಯ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಚಾಂದಿನಿ ಅವರ ಆರೋಗ್ಯ ತೀರಾ ಹದಗೆಟ್ಟಿತ್ತು. ಒಂದಲ್ಲ ಒಂದು ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿಗೆ ತನಗಿದ್ದ ಅಪರೂಪದ ಕಾಯಿಲೆ ಬಗ್ಗೆ ಗೊತ್ತೇ ಇರಲಿಲ್ಲ. ಹೀಗಾಗಿ ಸುಳ್ಯ, ಮಂಗಳೂರು ಸೇರಿದಂತೆ ಹಲವೆಡೆ ಚಿಕಿತ್ಸೆ ಪಡೆದರೂ ಗುಣಮುಖರಾಗಿರಲಿಲ್ಲ.

ಚಾಂದಿನಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅವರು Hyper IGE Mediated Mast cell activation syndromeನಿಂದ (ಹೈಪರ್-IgE ಸಿಂಡ್ರೋಮ್) ಬಳಲುತ್ತಿರುವುದು ಬೆಳಕಿಗೆ ಬಂದಿದೆ.
ಚಾಂದಿನಿ ಅವರು ಬಳಲುತ್ತಿದ್ದ Hyper IGE Mediated Mast cell activation syndromeಗೆ ಜಿಲ್ಲಾಮಟ್ಟದಲ್ಲಿ ಚಿಕಿತ್ಸಾ ಸೌಲಭ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಹೇಳಿದ್ದ ಕಾರಣ, ಹೈದರಾಬಾದ್ನ AIG ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.

ಈ ಕಾಯಿಲೆಯಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಚಾಂದಿನಿ ಅವರು ಚಿಕಿತ್ಸೆಯ ನೆರವಿಗಾಗಿ ವೈದ್ಯಕೀಯ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸರ್ಕಾರ ಸಕಾಲದಲ್ಲಿ ಹಣ ಬಿಡುಗಡೆ ಮಾಡದ ಕಾರಣ ನಿಗದಿತ ಆಸ್ಪತ್ರೆಗಳಲ್ಲಿ ಚಾಂದಿನಿ ಅವರಿಗೆ ಸರಿಯಾಗಿ ಚಿಕಿತ್ಸೆ ಸಿಗಲಿಲ್ಲ ಎನ್ನಲಾಗಿದೆ. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ನಿನ್ನೆ ಸಾವನ್ನಪ್ಪಿದ್ದಾರೆ.
ಸರ್ಕಾರದ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ.




