ಉಡುಪಿ: ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗಕ್ಕೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಪದ್ಬಾಂಧವ ಈಶ್ವರ ಮಲ್ಪೆ ಅವರನ್ನು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಅಂಬಾಸಿಡರ್ ಆಗಿ ನೇಮಕ ಮಾಡಿದೆ.

ಈ ಕುರಿತು ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥೆ ಡಾ. ಮಧುಮಾಲ ಕೆ, ಮಾಹಿತಿ ನೀಡಿ ಒಂದು ವರ್ಷಗಳ ಕಾಲ ಆಳ್ವಾಸ್ ಮತ್ತು ಸುತ್ತಮುತ್ತಲಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆ ಹಮ್ಮಿಕೊಂಡಿದೆ. ಮುಖ್ಯವಾಗಿ ಯುವಜನರಲ್ಲಿ ಮೊಬೈಲ್ ಬಳಕೆ ಬಗ್ಗೆ ತಿಳಿಹೇಳುವುದು , ತಮ್ಮ ಸುರಕ್ಷತೆ ಬಗ್ಗೆ , ಭವಿಷ್ಯದ ಬಗ್ಗೆ ಅದರಲ್ಲೂ ಮುಖ್ಯವಾಗಿ ನೀರಿನತ್ತ ಹೋಗಿ ಮಕ್ಕಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿರುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಜೊತೆಗೆ ಆಸುಪಾಸಿನ 15 ಕಾಲೇಜುಗಳಲ್ಲಿ ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವರ್ಷದ ಕೊನೆಗೆ ಮಲ್ಪೆ ಬೀಚಿನಲ್ಲೂ ಅವೇರ್ನೆಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಲ್ಪೆ ಬೀಚ್ ನ ಕಾರ್ಯಕ್ರಮದಲ್ಲಿ ವಿವಿಧ ಜಾಗೃತಿ ಮೂಡಿಸುವ ಸ್ಪರ್ಧೆಗಳನ್ನು ಆಯೋಜನೆ ಮಾಡಿ ಮಕ್ಕಳಿಗೆ ಬಹುಮಾನವನ್ನು ಕೂಡ ನೀಡಲಾಗುತ್ತದೆ. ಒಟ್ಟಾರೆ ಮಕ್ಕಳು ತಮ್ಮ ಅಮೂಲ್ಯ ಜೀವವನ್ನು ಕಳೆದುಕೊಳ್ಳಬಾರದು.

ಜೊತೆಗೆ ತಮ್ಮ ಭವಿಷ್ಯ ಮತ್ತು ಜೀವನದ ಬಗ್ಗೆ ಅವರಲ್ಲಿ ಜಾಗೃತಿ ಮೂಡಬೇಕು .ಕ್ಷುಲ್ಲಕ ಕಾರಣಗಳಿಗಾಗಿ ತಮ್ಮ ಭವಿಷ್ಯ ಮತ್ತು ಜೀವವನ್ನು ಕಳೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಮತ್ತು ಯುವ ಜನತೆಗೆ ಕಾರ್ಯಕ್ರಮದಿಂದ ಅನುಕೂಲವಾಗಲಿ ಎಂಬುದು ಇದರ ಉದ್ದೇಶ. ಇದರ ಅಂಗವಾಗಿ ಈಗಾಗಲೇ ಈಶ್ವರ ಮಲ್ಪೆ ಅವರು ಆಳ್ವಾಸ್ ನಲ್ಲಿ ಜಾಗೃತಿ ಉಪನ್ಯಾಸ ನೀಡಿದ್ದಾರೆ. ಮುಂದೆ ಅವರು ಅಥವಾ ಅವರ ತಂಡದ ಸದಸ್ಯರು ಈ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ ಎಂದರು.



