ಬೆಂಗಳೂರು : ನಂದಿನಿ ತುಪ್ಪ ದುಬಾರಿಯಾದ ಬೆನ್ನಲ್ಲೇ ಇತ್ತ ಹಾಲಿನ ದರವೂ ಹೆಚ್ಚಳವಾಗುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ.
ಈ ಕುರಿತು ಸಚಿವರುಗಳು ಮತ್ತು ಹಾಲು ಒಕ್ಕೂಟಗಳ ಪ್ರತಿನಿಧಿಗಳು ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ‘ಸದ್ಯ ಪ್ರತಿ ಲೀಟರ್ ಹಾಲಿಗೆ ರೈತರಿಗೆ ನಾಲ್ಕು ರೂಪಾಯಿ ಪ್ರೋತ್ಸಾಹಧನ ಹೋಗುತ್ತಿದೆ. ಇದರಿಂದ ಹಾಲು ಒಕ್ಕೂಟಗಳಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ, ಹಾಲಿನ ದರ ಏರಿಕೆ ಬಗ್ಗೆ ಪ್ರಸ್ತಾವ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ‘ನಮ್ಮ ರಾಜ್ಯದಲ್ಲಿ ಮಾತ್ರ ಹಾಲಿನ ಬೆಲೆ ಕಡಿಮೆ ಇದೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಿದೆ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ. ಇಂತಿಷ್ಟೇ ದರ ಹೆಚ್ಚಳ ಮಾಡುವಂತೆ ಕೇಳಿಲ್ಲ. ಅರ್ಧ ಲೀಟರ್ ಮಾರಾಟ ಮಾಡಿದರೆ ನಷ್ಟ ಇದೆ, ಒಂದು ಲೀಟರ್ ಮಾರಾಟವಾದರೆ ಲಾಭ ಆಗುತ್ತದೆ. ಈ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.





