ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಕೊಣಾಜೆ ಕ್ಯಾಂಪಸ್ನಲ್ಲಿ ಈ ಬಾರಿ ನಾಲ್ಕು ಪಿ.ಜಿ. ಕೋರ್ಸುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅವರು ತಿಳಿಸಿದ್ದಾರೆ.


ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಖ್ಯಾಶಾಸ್ತ್ರ, ಎಚ್ಆರ್ಡಿ, ಎಂಸಿಜೆ – ಪತ್ರಿಕೋದ್ಯಮ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹಾಗಾಗಿ ಈ ವರ್ಷಕ್ಕೆ ಅನ್ವಯಿಸುವಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಎಂಸಿಜೆ ವಿಭಾಗಕ್ಕೆ ಕೇವಲ ಒಬ್ಬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದರು. ಈ ವಿಭಾಗವನ್ನು ನಡೆಸಲು ಕನಿಷ್ಠ 10-15 ವಿದ್ಯಾರ್ಥಿಗಳಾದರೂ ಬೇಕು. ಈ ಬಗ್ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಆಡಳಿತಾತ್ಮಕ ಸಮಜಾಯಿಷಿ ನೀಡಲಾಗಿದೆ ಎಂದರು.

ವಿಶ್ವವಿದ್ಯಾನಿಲಯಕ್ಕೆ ಕೊಣಾಜೆ ಗ್ರಾಮಪಂಚಾಯತ್ನಿಂದ ಕಂದಾಯ ವಿಧಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಲಾಗುವ ಕಟ್ಟಡಗಳಿಗೆ ಮಾತ್ರ ಕಂದಾಯ ವಿಧಿಸಬಹುದೇ ವಿನಃ ಸೇವಾ ವಿಭಾಗಗಳಿಗೆ ವಿಧಿಸಬಾರದು. ಈ ಬಗ್ಗೆ ಸ್ಪೀಕರ್ ಹಾಗೂ ಶಾಸಕ ಖಾದರ್ ಬಳಿ ಮಾತುಕತೆ ನಡೆಸಲಾಗಿದೆ. ಸರಿಯಾಗಿ ಕಂದಾಯ ಲೆಕ್ಕಾಚಾರ ನಡೆದ ಬಳಿಕ ಮುಂದಿನ ಹಂತದಲ್ಲಿ ಅದನ್ನು ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.




