ಕಾಪು: ಖಾಸಗಿ ಎಕ್ಸ್ಪ್ರೆಸ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಬಸ್ ನಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಾಪು ಪಡುಗ್ರಾಮದ ನಿವಾಸಿ ಹಾಗೂ ಮಂಗಳೂರಿನ ಹೋಟೆಲ್ ಉದ್ಯೋಗಿ ಸಕೇಂದ್ರ ಪೂಜಾರಿ (52) ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್ ಉಚ್ಚಿಲಕ್ಕೆ ತಲುಪಿದಾಗ, ಬಾಗಿಲಿನ ಬಳಿ ನಿಂತಿದ್ದ ಸಕೇಂದ್ರ ಪೂಜಾರಿ ಇಳಿದುಕೊಳ್ಳಲು ಸಿದ್ಧವಾಗಿದ್ದರು. ಆ ವೇಳೆ ಎದುರು ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ವಾಹನವನ್ನು ಹಿಂದಿಕ್ಕುವ ಸಂದರ್ಭದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ವಾಹನವನ್ನು ಬಲಕ್ಕೆ ತಿರುಗಿಸಿದ್ದು ಇದರಿಂದಾಗಿ ಸಕೇಂದ್ರ ಬಾಗಿಲಿನ ಮೂಲಕ ಹೊರಗೆ ಎಸೆಯಲ್ಪಟ್ಟು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಅವರ ತಲೆಗೆ ತೀವ್ರ ಗಾಯವಾಗಿದ್ದು ತಕ್ಷಣವೇ ಅವರನ್ನು ಉಡುಪಿಯ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.



