ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸಟಲೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ತಾಯಿ ಬಿ.ಬಿ.ಜಾನ್ (59) ಮತ್ತು ಮಗಳು ಮಸಾಭಿ ಆರತಿ (34) ಎಂದು ಗುರುತಿಸಲಾಗಿದೆ.

ಆಂಧ್ರಪ್ರದೇಶ ನೆಲ್ಲೂರು ನಿವಾಸಿ ಜೆ.ಲತಾ ಅವರು ಕುಟುಂಬ ಸಮೇತ ಮೇ.2 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದರು. ಈ ವೇಳೆ ತಮ್ಮ ಬ್ಯಾಗ್ ನಲ್ಲಿ 6,79,000 ರೂಪಾಯಿ ಮೌಲ್ಯದ 97 ಗ್ರಾಂ ಚಿನ್ನಾಭರಣವನ್ನು ಇಟ್ಟುಕೊಂಡಿದ್ದರು. ಬಳಿಕ ಉದ್ಯೋಗ ವಿಚಾರವಾಗಿ ಉಡುಪಿ ಕಡೆಗೆ ತೆರಳುವಾಗ ಬ್ಯಾಗ್ ಪರಿಶೀಲಿಸಿದಾಗ ಚಿನ್ನಾಭರಣ ಕಳವು ಆಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ಮೇ.4 ರಂದು ಪ್ರಕರಣ ದಾಖಲಿಸಿಕೊಂಡಿದ್ದರು.

ತನಿಖೆ ಮುಂದುವರಿಸಿದ ಪೊಲೀಸರು ನ.23 ರಂದು ಧರ್ಮಸ್ಥಳದ ದ್ವಾರದ ಬಳಿ ಮತ್ತೆ ಕಳ್ಳತನ ಮಾಡಲು ಪ್ರಯತ್ನಿಸುವ ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ನ.23 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸುಮಾರು ರೂ.5 ಲಕ್ಷ 32 ಸಾವಿರ ಮೌಲ್ಯದ 76ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಈ ಹಿಂದೆ ಹಲವು ಕಳ್ಳತನ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವುದು ತನಿಖೆ ವೇಳೆ ತಿಳಿದು ಬಂದಿದೆ.



