Breaking
22 Mar 2026, Sun

ದಕ್ಷಿಣ ಕನ್ನಡದಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಪರಿಹಾರ: ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದ್ದು, ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ. 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ಒಳಗೆ ಪರವಾನಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ 19 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಇನ್ನೂ 42 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಇದರಿಂದಾಗಿ ಮುಂದಿನ ಐದು ವರ್ಷ ಮರಳುಗಾರಿಕೆಗೆ ಸಮಸ್ಯೆಯಾಗುವ ಸಾಧ್ಯತೆ ಇಲ್ಲ.

ಜಿಲ್ಲೆಯಲ್ಲಿ ಈ ಹಿಂದೆ 30-35 ರೂ.ಗೆ ದೊರೆಯುತ್ತಿದ್ದ ಕೆಂಪುಕಲ್ಲು ಬಳಿಕ 65 ರೂ.ಗೆ ಏರಿಕೆಯಾಗಿತ್ತು. ಈ ಸಮಸ್ಯೆ ಬಗೆಹರಿಸಿ, ಕೆಂಪು ಕಲ್ಲು ತೆಗೆಯಲು ಇದುವರೆಗೆ 59 ಪರ್ಮಿಟ್‌ಗಳನ್ನು ನೀಡಲಾಗಿದೆ ಎಂದರು.

ಇನ್ನೂ 12 ಅರ್ಜಿಗಳು ಬಾಕಿ ಉಳಿದಿದ್ದು, ಶೀಘ್ರ ವಿಲೇವಾರಿ ಮಾಡಲಾಗುವುದು. ಸದ್ಯ ಕಲ್ಲಿನ ದರ 45 ರೂ.ಗೆ ಇಳಿಕೆಯಾಗಿದೆ. ಮುಂದೆ ಇದನ್ನು 40 ರೂ.ಗಿಂತ ಕೆಳಗೆ ಇಳಿಸುವ ಉದ್ದೇಶ ಇದೆ . ಕೆಂಪುಕಲ್ಲು ತೆಗೆಯಲು ಅರ್ಜಿ ಆಹ್ವಾನಿಸಲಾಗಿದ್ದು, 60 ಅರ್ಜಿಗಳು ಮಾತ್ರ ಬಂದಿದೆ. ಆಸಕ್ತರು ಅರ್ಜಿ ಹಾಕಿದರೆ ಪರ್ಮಿಟ್ ನೀಡಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Leave a Reply

Your email address will not be published. Required fields are marked *