ಮಂಗಳೂರು: ದ್ವಿಚಕ್ರ ವಾಹನ ಕದ್ದು ಅದನ್ನೇ ಬಳಸಿಕೊಂಡು ಸರಕಳ್ಳತನ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ತಿರುವನಂತಪುರಂನ ಆದಿತ್ ಗೋಪಾನ್ ಯಾನೆ ಮುತ್ತು ಕೃಷ್ಣ ಬಂಧಿತ ಆರೋಪಿ.

ಘಟನೆಯ ವಿವರ:
ನ.21ರಂದು ನಗರದ ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ಧೆಯೊಬ್ಬರು ತನ್ನ ಮನೆಯ ಬಳಿ ನಿಂತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ಸರವನ್ನು ಕಸಿದುಕೊಂಡು ಹೋಗಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಡಿ. 04 ರಂದು ಆರೋಪಿಯ ಬಗ್ಗೆ ವಿಶೇಷ ತಂಡಕ್ಕೆ ದೊರೆತ ಮಾಹಿತಿಯಂತೆ ಕದ್ರಿ ಜೋಗಿ ಮಠದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ ಸಂಶಯಾಸ್ಪದವಾಗಿ ಬಂದ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಪರಿಶೀಲಿಸಿದಾಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ ವಾಹನವಾಗಿದ್ದು, ವಿಚಾರಿಸಿದಾಗ ಆರೋಪಿಯು ಕಳ್ಳತನ ಮಾಡಿದ ದ್ವಿಚಕ್ರ ವಾಹನವನ್ನು ಬಳಸಿಕೊಂಡು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದಾಗಿ ಬೆಳಕಿಗೆ ಬಂದಿದೆ.

ಸದ್ಯ ಆರೋಪಿಯಿಂದ 4 ದ್ವಿಚಕ್ರ ವಾಹನ ಮತ್ತು ಚಿನ್ನಾಭರಣ ಸಹಿತ 5 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




