ಚಿಕ್ಕಮಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಡಿ.5ರಂದು ನಡೆದಿದೆ.
ಕಾಂಗ್ರೆಸ್ ಕಾರ್ಯಕರ್ತ, ಗಣೇಶ್ ಗೌಡ(38) ಹತ್ಯೆಗೊಳಗಾದವರು.
ಆರೋಪಿಗಳಾದ ಸಂಜಯ್, ಭುಷಣ್, ಮಿಥುನ್ ಎಂಬವರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಖರಾಯಪಟ್ಟಣದಲ್ಲಿ ಎರಡು ದಿನಗಳ ಹಿಂದೆ ದತ್ತ ಜಯಂತಿಯ ಬ್ಯಾನರ್ ತೆರವು ವಿಚಾರವಾಗಿ ಎರಡು ತಂಡಗಳ ಮಧ್ಯೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ತಂಡಗಳ ಮಧ್ಯೆ ಶುಕ್ರವಾರ ರಾತ್ರಿಯೂ ಸಖರಾಯಪಟ್ಟಣ ಬಾರ್ ಬಳಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದಾಗಿ ಅರ್ಧ ಗಂಟೆಯ ಬಳಿಕ ಸಖರಾಯಪಟ್ಟಣದ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ಗಣೇಶ್ ಗೌಡರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದಾರೆ.
ಈ ಬಗ್ಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




