ಬಂಟ್ವಾಳ: ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿ 16 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ಡಿ.20 ರಂದು ನಡೆದಿದೆ.

ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಿಟ್ಲ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಈ ವೇಳೆ ಸ್ಥಳದಲ್ಲಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು, ಸ್ಥಳದಲ್ಲಿ ಸೇರಿದ್ದ ಜನರಿಗೆ ಕಾನೂನು ಬಾಹಿರವಾದ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಪ್ರೇರಣೆಯನ್ನು ನೀಡಿದ್ದಾರೆ.

ದಾಳಿಯ ವೇಳೆ ಕಾನೂನು ಬಾಹಿರವಾಗಿ ಕೋಳಿ ಅಂಕದಲ್ಲಿ ತೊಡಗಿಸಿಕೊಂಡಿದ್ದ 16 ಜನರನ್ನು ಪೋಲಿಸರು ವಶಕ್ಕೆ ಪಡೆದು, 22 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಬಾಳು (ಕತ್ತಿಗಳನ್ನು) ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದ ಆರೋಪದಡಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರ ವಿರುದ್ಧ ಹಾಗೂ ಕಾನೂನುಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 16 ಜನರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.




