ಮಂಗಳೂರು : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ, ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ನಗರದ ಮಿನಿ ವಿಧಾನಸೌಧದ ಮುಂದೆ ಜ.9 ರಂದು ಪ್ರತಿಭಟನೆ ನಡೆಯಿತು.
ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಿಜೆಪಿ ನಾಯಕರುಗಳು ಇದು ಕೇವಲ ರಾಜಕೀಯ ಟೀಕೆಯಲ್ಲ, ಮಹಿಳಾ ಶಾಸಕರ ಗೌರವಕ್ಕೆ ಹಾಗೂ ದಲಿತ ಸಮುದಾಯದ ಘನತೆಗೆ ನೇರ ಸವಾಲು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟೆಯನ್ನು ಉದ್ದೇಶಿಸಿ ಸಂಸದ ಬ್ರಿಜೇಶ್ ಚೌಟ ಅವರು ಮಾತನಾಡಿ ರಾಜ್ಯದಲ್ಲಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನತೆ ತೆರಿಗೆ ಮೂಲಕ ಕಟ್ಟಿದ ಸಾವಿರಾರು ಕೋಟಿ ರೂಪಾಯಿ ಹಣವನ್ನು ನುಂಗಿ ಹಾಕಿದ್ದಾರೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಜೆಪಿ ಶಾಸಕಿಯೊಬ್ಬರನ್ನು ನಿಂದನೆ ಮಾಡುವ ಸಂದರ್ಭದಲ್ಲಿ ಅಂತಹ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವುದು ಸರಕಾರದ ಕರ್ತವ್ಯವಾಗಿದೆ. ಸಭಾಧ್ಯಕ್ಷ ಯು ಟಿ ಖಾದರ್ ಅವರ ಕ್ಷೇತ್ರದಲ್ಲಿ ಈ ರೀತಿ ಆಗುವುದಿದ್ದರೆ ಅವರೇನು ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದರು.

ಶಾಸಕ ವೇದವ್ಯಾಸ ಕಾಮತ್ ಕೂಡಾ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸಂದರ್ಭ ಪ್ರತಿಭಟನೆಯಲ್ಲಿ ಪಕ್ಷದ ನಾಯಕಿ ಸುಲೋಚನ ಭಟ್, ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಮೋನಪ್ಪ ಭಂಡಾರಿ, ಸಂಜೀವ ಮಠಂದೂರು ಮತ್ತಿತರರು ಪಾಲ್ಗೊಂಡಿದ್ದರು.




