ಬಂಟ್ವಾಳ: ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿಯು ದಶಮಾನೋತ್ಸವದ ಅಂಗವಾಗಿ ಆಯೋಜಿಸಲಾದ ದಶ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ಜ. 12 ರಂದು ಇರ್ವತ್ತೂರುಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಿ.ಪಂ.ಮಾಜಿ ಸದಸ್ಯ, ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕು ಅಧ್ಯಕ್ಷ ಎಂ. ತುಂಗಪ್ಪ ಬಂಗೇರಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇರ್ವತ್ತೂರು ಪದವು ಶ್ರೀ ಶಾರದೋತ್ಸವ ಸಮಿತಿಯು ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಇರ್ವತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ಮೂಡಾಯಿಮಠ ಅಧ್ಯಕ್ಷತೆ ವಹಿಸಿದ್ದರು.
ಸಿದ್ಧಕಟ್ಟೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು ದಶ ಕಾರ್ಯಕ್ರಮಗಳ ನಾಮಪಲಕ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರದೀಪ್ ಡಿಸೋಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್, ಶಾರದೋತ್ಸವ ಸಮಿತಿ ಕಾರ್ಯಾಧ್ಯಕ್ಷ ಟಿ. ಹರೀಂದ್ರ ಪೈ, ಹಿರಿಯ ಪತ್ರಕರ್ತ ಗೋಪಾಲ ಅಂಚನ್, ಪ್ರಗತಿಪರ ಕೃಷಿಕ ದೇವಪ್ಪ ಶೆಟ್ಟಿ ಕುಂಟಜಾಲು, ದಶಮಾನೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಪೂಜಾರಿ ಬನತ್ತಕೋಡಿ ಉಪಸ್ಥಿತರಿದ್ದರು.

ಶ್ರೀ ಶಾರದಾ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ದಯಾನಂದ ಎರ್ಮೆನಾಡು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ದಶ ಕಾರ್ಯಕ್ರಮಗಳ ಸರಣಿ ಕಾರ್ಯಕ್ರಮದ ಮೊದಲ ಕಾರ್ಯಕ್ರಮವಾಗಿ ತೋಟಗಾರಿಕೆ ಇಲಾಖೆ ಬಂಟ್ವಾಳ, ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕು, ಇರ್ವತ್ತೂರು ಗ್ರಾಮ ಪಂಚಾಯತ್ ಹಾಗೂ ಶ್ರೀ ಶಾರದೋತ್ಸವ ಸೇವಾ ಸಮಿತಿ ಸಹಯೋಗದೊಂದಿಗೆ “ಜೇನು ಸಾಕಾಣಿಕೆ ಮಾಹಿತಿ ಮತ್ತು ತರಬೇತಿ” ಕಾರ್ಯಾಗಾರ ನಡೆಯಿತು.



