ಉಡುಪಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳದ ಎರ್ನಾಕುಲಂ ಜಿಲ್ಲೆಯ ನಿವಾಸಿಗಳಾದ ಆಶಿಕ್ ಅನ್ಸಾರ್ ಮತ್ತು ಮೊಹಮ್ಮದ್ ಅಲ್ತಾಫ್ ಎಂದು ಗುರುತಿಸಲಾಗಿದೆ.

ಡಿ. 28 ರಂದು ರಾತ್ರಿ 9 ಗಂಟೆ ಸುಮಾರಿಗೆ, ಮೂಡನಿಡಂಬೂರು ಗ್ರಾಮದ ನಿವಾಸಿ ನಾಗಚಂದ್ರ ಅವರು ಕರಾವಳಿ ಬೈಪಾಸ್ ರಸ್ತೆಯಲ್ಲಿರುವ ಲ್ಯಾಂಡ್ಮಾರ್ಕ್ ಕಟ್ಟಡದ ಬಳಿ ತನ್ನ ಬೈಕ್ ನಿಲ್ಲಿಸಿ ಮನೆಗೆ ತೆರಳಿದ್ದರು. ಮರುದಿನ ಬೆಳಿಗ್ಗೆ 7 ಗಂಟೆ ಸುಮಾರಿಗೆ ಸ್ಥಳಕ್ಕೆ ಬಂದಾಗ, ಬೈಕ್ ಕದ್ದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ತನಿಖೆ ಕೈಗೊಂಡ ಪೊಲೀಸರು ಜ. 4 ರಂದು ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಮುಕ್ಕಂನಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಆರೋಪಿಯಿಂದ ಕದ್ದ ಕಪ್ಪು ಬಣ್ಣದ ಯಮಹಾ ಆರ್15 ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕದ್ದ ವಾಹನದ ಮೌಲ್ಯ ಸುಮಾರು 70,000 ರೂ. ಎಂದು ಅಂದಾಜಿಸಲಾಗಿದೆ.




