ಮಂಗಳೂರು: ತೀವ್ರ ರಕ್ತದೊತ್ತಡದಿಂದ ಪೊಲೀಸ್ ಸಿಬ್ಬಂದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ನಗರದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹಾವೇರಿ ಜಿಲ್ಲೆಯ ಮಾರುತಿ ಲಮಾಣಿ (36) ಎಂದು ಗುರುತಿಸಲಾಗಿದೆ.

ಮಾರುತಿ ಲಮಾಣಿ ಅವರು ಕಳೆದ ಎರಡು ದಿನಗಳ ಹಿಂದಷ್ಟೇ ಕರ್ತವ್ಯ ಮುಗಿಸಿ ಬಿಕರ್ನಕಟ್ಟೆಯಲ್ಲಿರುವ ತಮ್ಮ ನಿವಾಸಕ್ಕೆ ವಾಪಸಾಗಿದ್ದರು. ಈ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ವಿಶ್ರಾಂತಿ ಪಡೆದುಕೊಂಡಿದ್ದರು. ಬಳಿಕ ಅವರ ಆರೋಗ್ಯದಲ್ಲಿ ಏಕಾಏಕಿ ಕುಸಿತ ಉಂಟಾಗಿದ್ದು, ಮನೆಯವರು ಅವರನ್ನು ತಕ್ಷಣವೇ ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತರು ಕಳೆದ ಆರು ವರ್ಷಗಳಿಂದ ಮಂಗಳೂರು ನಗರದ ಸಶಸ್ತ್ರ ನಗರ ಮೀಸಲು ಪಡೆಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಂಚಾರಿ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.




