ಉಡುಪಿ: ದ್ವಿಚಕ್ರ ವಾಹನವೊಂದು ತ್ರಿಚಕ್ರದ ಎಲೆಕ್ಟ್ರಿಕ್ ವೀಲ್ಚೇರ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತ್ರಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಪುತ್ತೂರು ನಿವಾಸಿ ಮಾಧವಮೂರ್ತಿ ಆಚಾರ್ಯ (61) ಎಂದು ಗುರುತಿಸಲಾಗಿದೆ.

ಉಡುಪಿಯಿಂದ ಸಂತೆಕಟ್ಟೆ ಕಡೆಗೆ ಅತೀ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಹರಿರಾವ್ ಎಂಬವರು, ಮುಂದೆ ಸಾಗುತ್ತಿದ್ದ ಮೂರು ಚಕ್ರದ ಎಲೆಕ್ಟ್ರಿಕ್ ವೀಲ್ಚೇರ್ ವಾಹನಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಢಿಕ್ಕಿಯ ರಭಸಕ್ಕೆ ಮಾಧವ ಮೂರ್ತಿ ಆಚಾರ್ಯ ಅವರು ರಸ್ತೆಗೆ ಬಿದ್ದಿದ್ದು ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿದೆ. ತಕ್ಷಣವೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಹರಿರಾವ್ ಅವರಿಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.






