ಕುಂದಾಪುರ: ಬ್ರಹ್ಮಾವರ ತಾಲೂಕಿನ ಕೋಟ ಬಸ್ ನಿಲ್ದಾಣದ ಸಮೀಪದಲ್ಲಿ ಪ್ರವಾಸಿ ವಾಹನವೊಂದರ ಟೈರ್ ಸ್ಫೋಟಗೊಂಡು ಪಲ್ಟಿಯಾದ ಘಟನೆ ಫೆ. 10 ರಂದು ನಡೆದಿದೆ.

ದಾವಣಗೆರೆಗೆ ತೆರಳಿ ಬಳಿಕ ಮುರುಡೇಶ್ವರಕ್ಕೆ ಭೇಟಿ ನೀಡಿದ್ದ ಬೀದರ್ ಮೂಲದ ಯುವಕರ ತಂಡವು ಉಡುಪಿ ಶ್ರೀ ಕೃಷ್ಣ ಮಠಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ವಾಹನದಲ್ಲಿ 13 ಮಂದಿ ಯುವಕರಿದ್ದು ಕೋಟ ಬಸ್ ನಿಲ್ದಾಣದ ಬಳಿ ವಾಹನದ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ದಾಟಿ, ಎದುರುಗಡೆಯಿಂದ ಬರುತ್ತಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.

ಘಟನೆಯಲ್ಲಿ ಪ್ರವಾಸಿ ವಾಹನ ಹಾಗೂ ಎರಡು ಕಾರುಗಳು ಜಖಂಗೊಂಡಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.








