ಬೆಳ್ತಂಗಡಿ: ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ತೆರಳಿದ ವೇಳೆ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸಬೇಕೆಂದು ಬಾಲಕನ ಪೋಷಕರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಾ.ಜಿ.ಪರಮೇಶ್ವರ ಅವರನ್ನು ಮಂಗಳೂರಿನಲ್ಲಿ ಫೆ.17ರಂದು ರಕ್ಷಿತ್ ಶಿವರಾಮ್ ಅವರ ನೇತೃತ್ವದಲ್ಲಿ ಭೇಟಿ ಮಾಡಿದ ಪೋಷಕರು ಮನವಿಯನ್ನು ಸಲ್ಲಿಸಿದರು.

ಸುಮಂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಹಾಗೂ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ಅವರಿಂದ ತನಿಖಾ ವರದಿಗಳ ವಿವರಗಳನ್ನು ಪಡೆದುಕೊಂಡರು.

ಈ ವೇಳೆ ಮಾತನಾಡಿದ ಅರುಣ್ ಕುಮಾರ್, ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತಂಡ ಇದುವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ನೊಂದ ಪೋಷಕರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ ಉಪಸ್ಥಿತರಿದ್ದರು.





