ಬಂಟ್ವಾಳ: ಅಬುದಾಬಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಮಾಸ್ಟರ್ಸ್ ಗೇಮ್ಸ್ ಈಜು ಸ್ಪರ್ಧೆಯಲ್ಲಿ ವಿಟ್ಲದ ಶ್ರೀಲಕ್ಷ್ಮಿ ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ. ಅಲ್ಲದೆ ಅವರು ಎರಡು ಬೆಳ್ಳಿ ಹಾಗೂ ಒಂದು ಕಂಚಿನ ಪದಕಗಳನ್ನು ಗಳಿಸಿ, ತಮ್ಮ ಮೊದಲ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲೇ ಉತ್ತಮ ಸಾಧನೆ ತೋರಿರುವುದು ಗಮನಾರ್ಹವಾಗಿದೆ.

ಶ್ರೀಲಕ್ಷ್ಮಿ ಅವರು ವಿಟ್ಲದ ಕೋಟಿಕೆರೆಯ ಗೋಪಾಲ ಸಪಲ್ಯ ಮತ್ತು ಲೀಲಾವತಿ ದಂಪತಿಗಳ ಪುತ್ರಿಯಾಗಿದ್ದಾರೆ. ವಿಟ್ಲದ ತುಳಸೀದಾಸ ಶೆಣೈ ಮತ್ತು ಉಮೇಶ ಗಾಣಿಗ ಅವರಿಂದ ತರಬೇತಿ ಪಡೆದು, ಪ್ರಾಥಮಿಕ ಶಾಲಾ ಹಂತದಿಂದಲೇ ತಂದೆಯ ಪ್ರೋತ್ಸಾಹದೊಂದಿಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕಗಳನ್ನು ಪಡೆದಿದ್ದಾರೆ.

ಪ್ರಸ್ತುತ ಅವರು ಪಡೀಲಿನ ಅಮೃತ ಕಾಲೇಜಿನಲ್ಲಿ ತೃತೀಯ ವರ್ಷದ ವಾಣಿಜ್ಯ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಜೊತೆಗೆ ಮಂಗಳೂರಿನ ಮಂಗಳಾದೇವಿ ಕ್ರೀಡಾಂಗಣದ ಈಜುಕೊಳದಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸುವ ಆಕಾಂಕ್ಷೆಯನ್ನು ಹೊಂದಿದ್ದಾರೆ.









