ಕುಂದಾಪುರ: ಕಾರು, ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಜಂಕ್ಷನ್ ಬಳಿ ನಡೆದಿದೆ.

ಗಾಯಗೊಂಡವರನ್ನು ಪಾದಚಾರಿ ಸೂರ್ಯ ಖಾರ್ವಿ, ಸ್ಕೂಟರ್ ಸವಾರ ಮಂಜುನಾಥ್ ಹಾಗೂ ಕಾರಿನಲ್ಲಿದ್ದ ವತ್ಸಲಾ ಮತ್ತು ಚಾಲಕ ಸತೀಶ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಸತೀಶ್ ಅವರು ಚಲಾಯಿಸುತ್ತಿದ್ದ ಕಾರು ಮೊದಲು ಮುಂದೆ ಸಾಗುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯಲ್ಲಿದ್ದ ಪಾದಚಾರಿ ಸೂರ್ಯ ಅವರಿಗೆ ಡಿಕ್ಕಿ ಹೊಡೆದಿದೆ. ನಂತರ ಕುಂದಾಪುರ ಕಡೆಗೆ ತೆರಳುತ್ತಿದ್ದ ಮಂಜುನಾಥ್ ಅವರ ಸ್ಕೂಟರ್ಗೆ ಢಿಕ್ಕಿಯಾಗಿದೆ.

ಡಿಕ್ಕಿಯ ತೀವ್ರತೆಗೆ ಸೂರ್ಯ ಖಾರ್ವಿ ಅವರ ತಲೆ ಮತ್ತು ಕೈಕಾಲುಗಳಿಗೆ ಗಾಯಗಳಾಗಿದ್ದು, ಮಂಜುನಾಥ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಕೂಟರ್ ರಸ್ತೆಯ ಬದಿಗೆ ಎಸೆಯಲ್ಪಟ್ಟಿದೆ. ಲಾರಿಯ ಮುಂಭಾಗದ ಎಡಭಾಗಕ್ಕೂ ಹಾನಿಯಾಗಿದೆ.

ಕಾರು ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.
ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


