ಬೆಳ್ತಂಗಡಿ: ದ.ಕ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರ , ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದು ಬಡಜನರ ಮೇಲಿನ ಮರಣಶಾಸನವಾಗಿದೆ.

ಬಡಜನರಿಗೆ ಉಚಿತ ಆರೋಗ್ಯ ಸೇವೆ ನೀಡುವ ಸರ್ಕಾರಿ ಆಸ್ಪತ್ರೆಗಳು ಜನಸಾಮಾನ್ಯರಿಗೆ ವರದಾನವಾಗಿತ್ತು. ಇದೀಗ ಏಕಾಏಕಿ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸರ್ಕಾರಿ ಆಸ್ಪತ್ರೆಗಳನ್ನು ಬಡಜನರ ಸುಲಿಗೆ ಕೇಂದ್ರವಾಗಿ, ಬಡರೋಗಿಗಳನ್ನು ಗುರಾಣಿಯಂತೆ ಪ್ರಯೋಗಶಾಲೆಯಲ್ಲಿ ಉಪಯೋಗಿಸಲು ಅವಕಾಶ ಮಾಡಿಕೊಟ್ಟಿದೆ. ಇದು ಸರ್ಕಾರದ ಅವಿವೇಕಿತನದ ತೀರ್ಮಾನವಾಗಿದ್ದು, ಸರ್ಕಾರಕ್ಕೆ ಸಂವಿಧಾನಬದ್ಧ ಉಚಿತ ಆರೋಗ್ಯ ಸೇವೆ ನೀಡಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಮಂಜೂರುಗೊಳಿಸಿ, ಖಾಸಗಿ ಮೆಡಿಕಲ್ ಕಾಲೇಜ್ ಗಳ ಕೆಂಗಣ್ಣಿಗೆ ಗುರಿಯಾದ ರಾಜ್ಯ ಸರ್ಕಾರ ಇದೀಗ ಧಣಿಗಳನ್ನು ಸಂತೋಷ ಪಡಿಸಲು ಜಿಲ್ಲೆಯ ಬಡಜನರನ್ನು ಬಲಿಕೊಡಲು ಸರ್ಕಾರಿ ಆಸ್ಪತ್ರೆಗಳನ್ನೇ ಖಾಸಗಿ ಆಸ್ಪತ್ರೆಗಳಿಗೆ ಮಾರಲು ಹೊರಟಿದೆ. ಯಾವುದೇ ಕಾರಣಕ್ಕೂ ಬಡಜನರ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ. ಒಂದು ವೇಳೆ ಈ ಒಪ್ಪಂದದಿಂದ ಹಿಂದೆ ಸರಿಯದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರು ಜಿಲ್ಲೆಯಲ್ಲಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಘೇರಾವ್ ಹಾಕಲಾಗುತ್ತದೆ ಎಂದು ಬೆಳ್ತಂಗಡಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಂಚಾಲಕ ಶೇಖರ್ ಎಲ್ ತಿಳಿಸಿದ್ದಾರೆ.





