ಬಂಟ್ವಾಳ: ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪಾರೆಂಕಿ ನಿವಾಸಿ ಕೃಷ್ಣ ( 55) ಎಂದು ಗುರುತಿಸಲಾಗಿದೆ.
ಏ. 20 ರಂದು ಮಡಂತ್ಯಾರು ಸಮೀಪದ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.

ಸೈಪುದ್ದೀನ್ ಅವರು ಮಡಂತ್ಯಾರಿನಿಂದ ಬಳ್ಳಮಂಜ ಕಡೆಗೆ ಬೈಕ್ನಲ್ಲಿ ಸಾಗುತ್ತಿದ್ದಾಗ, ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್ಟೇಕ್ ಮಾಡುವ ವೇಳೆ, ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬರುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿಯ ರಭಸಕ್ಕೆ ಇಬ್ಬರೂ ಗಾಯಗೊಂಡಿದ್ದು, ಕೃಷ್ಣ ಅವರಿಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಕುರಿತು ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


