ಪುತ್ತೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬನ ಮೇಲೆ ವ್ಯಕ್ತಿಗಳ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದೆ.

ಹಲ್ಲೆಗೊಳಗಾದವನನ್ನು ಆದಿಲ್ ಎಂದು ಗುರುತಿಸಲಾಗಿದ್ದು, ಹಲ್ಲೆ ನಡೆಸಿದವರನ್ನು ಮೊಯಿನುದ್ದೀನ್ ಮತ್ತು ತಂಡ ಎಂದು ತಿಳಿದುಬಂದಿದೆ.

ಏ. 22ರಂದು ಪುತ್ತೂರು ಕಸಬಾ ಗ್ರಾಮದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಸಂಜೆ ಆದಿಲ್ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ಅವರೊಂದಿಗೆ ಚಹಾ ಕುಡಿಯುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇನ್ನಿತರ ಐವರು ಸೇರಿ ಏಕಾಏಕಿ ಆದಿಲ್ ಮೇಲೆ ಹಲ್ಲೆ ನಡೆಸಿದ್ದಾರೆ.
ಹಲ್ಲೆಯನ್ನು ತಡೆಯಲು ಮುಂದಾದ ಸ್ನೇಹಿತರಿಗೆ ಕೂಡಾ ಬೆದರಿಕೆ ಹಾಕಲಾಗಿದೆ. ಸಾರ್ವಜನಿಕರು ಜಮಾಯಿಸುತ್ತಿದ್ದಂತೆ, ಆರೋಪಿಗಳು ಆದಿಲ್ಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಕೆಲವು ತಿಂಗಳ ಹಿಂದೆ ಕಾಲೇಜಿನ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆಯಲ್ಲಿ ಮೊಯಿನುದ್ದೀನ್ ಮತ್ತು ತಂಡದವರನ್ನು ಆದಿಲ್ ತಡೆಯಲು ಮಧ್ಯಪ್ರವೇಶಿಸಿದ್ದನು. ಅದರಿಂದ ಉಂಟಾದ ವೈಮನಸ್ಯದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಗೊಂಡ ಆದಿಲ್ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


