Breaking
4 Jun 2026, Thu

ಕಳೆಂಜ–ಶಿಶಿಲ ಗ್ರಾಮದ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಜೊತೆ ಶಾಸಕ ಹರೀಶ್ ಪೂಂಜ ಚರ್ಚೆ

ಬೆಳ್ತಂಗಡಿ: ಕಳೆಂಜ ಹಾಗೂ ಶಿಶಿಲ ಗ್ರಾಮದ ಸರ್ವೇ ನಂ.309ರ ವ್ಯಾಪ್ತಿಯ ಕೃಷಿ ಭೂಮಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ಕಾನೂನು ತೊಡಕುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಎಫ್‌ಒ), ಮಂಗಳೂರು ವಿಭಾಗ ಅವರನ್ನು ಶಿಶಿಲ ಗ್ರಾಮಸ್ಥರೊಂದಿಗೆ ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಹಲವು ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದರೂ, ಭೂಮಿಗೆ ಸಂಬಂಧಿಸಿದ ಅರಣ್ಯ ಇಲಾಖೆಯ ತೊಡಕುಗಳಿಂದ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಗ್ರಾಮಸ್ಥರು ಸಭೆಯಲ್ಲಿ ವಿವರಿಸಿದರು. ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ಸಂಬಂಧಿತ ಅಧಿಕಾರಿಗಳೊಂದಿಗೆ ವಾಸ್ತವಾಂಶಗಳ ಪರಿಶೀಲನೆ ನಡೆಸಲಾಗಿದ್ದು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕಾನೂನುಬದ್ಧವಾಗಿ ಸೂಕ್ತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.

ಸಭೆಯಲ್ಲಿ ಗ್ರಾಮಸ್ಥರು ಎದುರಿಸುತ್ತಿರುವ ಭೂಮಿ ಸಂಬಂಧಿತ ತೊಂದರೆಗಳು, ದಾಖಲೆಗಳ ಸಮಸ್ಯೆ, ಅರಣ್ಯ ಇಲಾಖೆಯಿಂದ ಉಂಟಾಗಿರುವ ಗೊಂದಲಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ರೈತರು ಹಾಗೂ ಸ್ಥಳೀಯರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಕೋರಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.

ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿದು ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮುಂದುವರಿಸಲಾಗುವುದು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

Leave a Reply

Your email address will not be published. Required fields are marked *