ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಗಡಾಯಿಕಲ್ಲು ಚಾರಣಕ್ಕೆ ಜೂನ್ 14ರಿಂದ ಅರಣ್ಯ ಇಲಾಖೆ ನಿರ್ಬಂಧ ಹೇರಿದೆ.
ಭಾರೀ ಮಳೆಯ ಪರಿಣಾಮ ಕಲ್ಲುಗಳು ಜಾರುವ ಸಾಧ್ಯತೆ ಹೆಚ್ಚಿರುವುದರಿಂದ ಚಾರಣ ಅಪಾಯಕಾರಿಯಾಗಿದ್ದು, ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗ ತಿಳಿಸಿದೆ.

ಜೂನ್ 1ರಿಂದ ಚಾರಣಕ್ಕೆ ಅವಕಾಶ ನೀಡಲಾಗಿದ್ದ ಹಿನ್ನೆಲೆ ನೂರಾರು ಪ್ರಕೃತಿ ಪ್ರೇಮಿಗಳು ಹಾಗೂ ಚಾರಣಿಗರು ಗಡಾಯಿಕಲ್ಲಿಗೆ ಭೇಟಿ ನೀಡಿ ಚಾರಣ ನಡೆಸಿದ್ದರು. ವಿಶೇಷವಾಗಿ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು.
ಆದರೆ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ಪ್ರವೇಶ ನಿರ್ಬಂಧ ಹೇರಲಾಗಿದ್ದು, ಚಾರಣಿಗರಲ್ಲಿ ನಿರಾಸೆ ಮೂಡಿಸಿದೆ. ಮಳೆಯ ಪ್ರಮಾಣ ಕಡಿಮೆಯಾದ ಬಳಿಕ ಪರಿಸ್ಥಿತಿಯನ್ನು ಪರಿಶೀಲಿಸಿ ಚಾರಣಕ್ಕೆ ಪುನಃ ಅವಕಾಶ ನೀಡುವ ಸಾಧ್ಯತೆ ಇದೆ.







